ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಚುನಾವಣೆಯು ಸುಸೂತ್ರವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಮತ್ತು ಪ್ರಜಾಪ್ರಾತಿನಿದ್ಯ ಕಾಯ್ದೆ 1951ರ ವಿಧಿ 135 ಸಿ ಮತ್ತು ಅಬಕಾರಿ ಕಾಯ್ದೆ 1965 ರ ಕಲಂ 21 ರ ಅಡಿಯಲ್ಲಿ ಮತದಾನದ ಅಂಗವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಮೇ.8 ರಂದು ಸಂಜೆ 6 ಗಂಟೆಯಿಂದ ಮೇ.10 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ಅಂಗವಾಗಿ ಮೇ. 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ.13 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ (ಮೈಸೂರು ನಗರ ಸೇರಿದಂತೆ) ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಮತ್ತು ಮದ್ಯ ಮಾರಾಟ , ಸಾಗಾಣಿಕೆ, ಶೇಖರಣೆಯನ್ನು ನಿಷೇಧಿಸಿ “ಒಣ ದಿವಸ”ಗಳೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಎಲ್ಲಾ ಮದ್ಯದ ಅಂಗಡಿಗಳನ್ನು ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಿಸಿ ಮೊಹರು ಮಾಡಿ ಅದರ ಕೀಯನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕು ಎಂದು ನಗರದ ಅಬಕಾರಿ ಉಪ ಆಯುಕ್ತರು ಮೈಸೂರು ಹಾಗೂ ಮೈಸೂರು ಗ್ರಾಮಾಂತರ ಅವರಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು ನಿರ್ದೇಶನ ನೀಡಿದ್ದಾರೆ.