ಮೈಸೂರು: ಅತಿಯಾದ ಆತ್ಮ ವಿಶ್ವಾಸದೊಂದಿಗೆ ಚುನಾವಣಾ ನಿರ್ವಹಣಾ ತಂತ್ರಗಾರಿಕೆಯಲ್ಲಿ ವಿಫಲತೆಯು ಈ ಬಾರಿಯ ವಿಧಾನ ಸಭೆಯ ಚುನಾವಣೆಯಲ್ಲಿ ಬಿಜೆಪಿಯ ಹಿನ್ನಡೆಗೆ ಕಾರಣವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.
ನಗರದ ರಾಜೇಂದ್ರ ಭವನದಲ್ಲಿ ಗುರುವಾರ ಮೈಸೂರು ನಗರ ಮತ್ತು ಜಿಲ್ಲಾ ಬಿಜೆಪಿವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಗಮನಿಸಿಕೊಳ್ಳಲಿಲ್ಲ ಎಂಬುದರ ಬಗ್ಗೆ ನೋವಿದೆ. ಈ ತಪ್ಪನ್ನು ಮುಂದಿನ ದಿನಗಳಲ್ಲಿ ಪಕ್ಷದ ನಾಯಕರು ತಿದ್ದಿಕೊಳ್ಳಲಿದ್ದಾರೆ ಎಂದರು.
ಬಿಜೆಪಿ ಕಾರ್ಯಕರ್ತರು ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಂಡ ಸೋಲನ್ನು ಮುಂದಿನ ಲೋಕ ಸಭಾ ಚುನಾವಣೆಯ ಗೆಲುವಿನ ಮೂಲಕ ದೂರ ಮಾಡಿಕೊಳ್ಳಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ರಾಜ್ಯದಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಪರಾಮರ್ಶೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಸಭೆಗಳನ್ನು ನಡೆಸುವ ಮೂಲಕ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಆಲಿಸುವ ಮೂಲಕ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡಲಾಗುವುದು. ಎಲ್ಲಿ ಕಳೆದು ಕೊಂಡಿದ್ದೇವೆಯೋ ಅಲ್ಲಿಯೇ ಹುಡುಕವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡುವ ಮೂಲಕ ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶೇ. 100ರಷ್ಟು ಫಲಿತಾಂಶ ಬರುವ ಮಟ್ಟಿಗೆ ಸಂಘಟಿತರಾಗಿ ಕಾರ್ಯ ನಿರ್ವಹಿಸಬೇಕುಎಂದು ಮನವಿ ಮಾಡಿದರು.
ಸಭೆಯಲ್ಲಿ ಕೆಲ ಕಾರ್ಯಕರ್ತರು ತಮ್ಮ ಸಮಸ್ಯೆಗಳನ್ನು ಆಲಿಸಬೇಕು. ಸೋಲಿಗೆ ಕಾರಣವೇನು ಎಂಬುದನ್ನು ಕೇಳಬೇಕು ಎಂದು ವೇದಿಕೆಯತ್ತ ಬಂದು ಮಾತನಾಡಲು ಮುಂದಾದರು. ಇದರಿಂದ ಕೆಲ ಕಾಲ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಮಾಜಿ ಸಿಎಂ ಸದಾನಂದ ಗೌಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಬಿಜೆಪಿ ದೊಡ್ಡ ಮನೆ ಇದ್ದಂತೆ ಮನೆಯ ಸಮಸ್ಯೆ ಮತ್ತು ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸಿದೇ ಪ್ರತ್ಯೇಕವಾಗಿ ಚರ್ಚೆ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಮಾಧಾನ ಗೊಳಿಸಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರಾದ ಹರ್ಷವರ್ಧನ್, ಎಲ್.ನಾಗೇಂದ್ರ, ತೋಂಟದಾರ್ಯ, ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಸೇರಿದಂತೆ ಹಲವು ಮಂದಿ ನಾಯಕರು ಇದ್ದರು.