ಮೈಸೂರು: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಗರ ಪ್ರದೇಶದ ಕ್ಷೇತ್ರಗಳಾದ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಆಗಿದೆ ಎಂಬುದನ್ನು ಗುರುತಿಸಿ ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿ ಎಂದರು.
ಮತದಾನ ಕಡಿಮೆಯಾಗಲು ಕೆಲವರು ಬೇರೆ ಪ್ರದೇಶಗಳಿಗೆ ವಲಸೆ ಹೋಗಿರುತ್ತಾರೆ. ಅವರ ಹೆಸರನ್ನು ಅವರು ಇರುವ ಮತಗಟ್ಟೆಗೆ ಫಾರಂ ೮ನ್ನು ನೀಡಿ ಶಿಫ್ಟ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ. ಇದರಿಂದ ಅವರು ಇರುವ ಕಡೆ ಮತದಾನ ಮಾಡಲು ಅನುಕೂಲವಾಗುತ್ತದೆ. ಚುನಾವಣಾ ಸಾಕ್ಷರತಾ ಕ್ಲಬ್ಗಳ ಮೂಲಕ ವ್ಯವಸ್ಥಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಮತದಾನದ ಮಹತ್ವ ಕುರಿತು ಒಂದು ನಿಮಿಷದ ಕಿರು ಚಿತ್ರಗಳ ಸ್ಪರ್ಧೆ ಆಯೋಜನೆ ಮಾಡಿ ಬಹುಮಾನ ನೀಡಿ. ಉತ್ತಮ ಕಿರು ಚಿತ್ರಗಳನ್ನು ಮತದಾನ ಜಾಗೃತಿಯಲ್ಲಿ ಬಳಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ 822 ಚುನಾವಣಾ ಸಾಕ್ಷರತಾ ಕ್ಲಬ್ಗಳನ್ನು ಸ್ಥಾಪಿಸಲಾಗಿದೆ. ಈ ಸಾಕ್ಷರತಾ ಕ್ಲಬ್ಗಳ ಮೂಲಕ ಮತದಾನ ಕುರಿತು ಜಾಥಾ, ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.