ನಂಜನಗೂಡು: ಬೇಸಿಗೆ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜೀವ ಜಲಕ್ಕಾಗಿ ಗ್ರಾಮಸ್ಥರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು.. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ನೇರಳೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಐದು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಹೊಸ ಬಡಾವಣೆಯಲ್ಲಿ ಕುಡಿಯುವ ನೀರಿನ ತೊಂಬೆ ಟ್ಯಾಂಕ್ ಗಳು ಇದ್ದು ಇಲ್ಲದಂತಿವೆ.
ಜಲ ಜೀವನ್ ಮಿಷನ್ ಯೋಜನೆಯಂತೂ ನೆಲಕಚ್ಚಿದೆ. ದೊಡ್ಡಕವಲಂದೆ ಹೋಬಳಿ ಬರಪೀಡಿತ ಪ್ರದೇಶವೆಂದು ಹಣೆ ಪಟ್ಟಿ ಹೊಂದಿದೆ. ದೊಡ್ಡಕವಲಂದೆ ಹೋಬಳಿಯ 59 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಳ್ಳ ಹಿಡಿದಿದೆ. ಇದರಿಂದ ಗ್ರಾಮಕ್ಕೆ ಐದು ದಿನಗಳಿಗೊಮ್ಮೆ ಎರಡು ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜನ-ಜಾನುವಾರುಗಳಿಗೆ ತುಂಬಾ ತೊಂದರೆಯಾಗಿದೆ.
ಒಂದು ವಾರಗಳ ಕಾಲ ಅದೇ ನೀರನ್ನು ನಾವು ಬಿಸಿ ಮಾಡಿ ಕುಡಿಯುತ್ತಿದ್ದೇವೆ. ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಯಿದೆ. ಈ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಟ್ಟು ನಿಂತಿರುವ ತೊಂಬೆ ಟ್ಯಾಂಕ್ ಗಳನ್ನು ಸರಿಪಡಿಸಬೇಕು. ನಮಗೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಗ್ರಾ.ಪಂ ಕಛೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.