ನಂಜನಗೂಡು: ರೈತರ ಸಾಲವನ್ನು ಮನ್ನಾ ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ರೈತರು ಪಂಜು ಹಿಡಿದು ದಿಡೀರ್ ಪ್ರತಿಭಟನೆ ನಡೆಸಿದ್ದಾರೆ.
ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಇಂದು ಗುರುವಾರ ಸಂಜೆ 6;30 ರ ಸಮಯದಲ್ಲಿ ಜಮಾಯಿಸಿದ ರೈತರು ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಬೇಕು. 26 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ಉದ್ಯಮಿಗಳ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಆದರೆ, ರೈತರ ಸಾಲವನ್ನು ಮನ್ನಾ ಮಾಡಿಲ್ಲ.
ಉದ್ಯಮಿಗಳ ಪರವಾಗಿ ಕೇಂದ್ರ ಸರ್ಕಾರ ಗುಲಾಮಿ ತನದಿಂದ ನಡೆದುಕೊಳ್ಳುತ್ತಿದೆ ಇದನ್ನು ಬಿಡಬೇಕು. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಇಂದು ದೇಶಾದ್ಯಂತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲದಿದ್ದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದರನ್ನು ಸೋಲಿಸುವ ಮೂಲಕ ನಾವು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.