ಹಿರೀಕ್ಯಾತನಹಳ್ಳಿ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈದ ಕ್ರೀಡಾ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಹುಣಸೂರು ತಾಲೂಕಿನ ಹರವೆ ಗ್ರಾಮದ ಅನುದಾನಿತ ಶ್ರೀ ಲಕ್ಷ್ಮಿ ದೇವಿ ವಿದ್ಯಾ ಸಂಸ್ಥೆಯ ಶಾಲಾ ಕ್ರೀಡಾಪಟುಗಳು ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಸುಫಿಯಾ ಬಾನು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಜೀವಿತಾ 800 ಮೀ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸನ್ಮಾನ ಮಾಡಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ರಾಧಾಮಹದೇವ್ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ ಗೆಲುವು ತಂದಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರ. ಪೋಷಕರು ಶಿಕ್ಷಣ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡುವುದರೊಂದಿಗೆ ಸಾಧನೆ ಮಾಡಲು ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹದೇವ್, ಮುಖ್ಯ ಶಿಕ್ಷಕ ಶೇಖರ್ ಪೋಷಕರಾದ ಸಾಧಿಕ್, ರಘು ಸಹ ಶಿಕ್ಷಕರುಗಳಾದ ಧರ್ಮರಾಜ್, ಶೃತಿ, ಗಾಯತ್ರಿ, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶಿವಣ್ಣ, ವಿಜಯ್ ಕುಮಾರ್ ಹಾಗೂ ಹಲವಾರು ಪೋಷಕರು ಹಾಜರಿದ್ದರು.