ನಂಜನಗೂಡು: ಶಾಸಕರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ರೀತಿ ನಮ್ಮ ತಂದೆಯ ಮೇಲೆ ಪ್ರೀತಿ ವಿಶ್ವಾಸವನ್ನು ಇಟ್ಟಿದ್ದರೋ, ಅದೇ ರೀತಿ ಪ್ರೀತಿ ವಿಶ್ವಾಸದಿಂದ ಸ್ವಾಗತಿಸುತ್ತಿದ್ದಾರೆ. ಅವರೊಟ್ಟಿಗೆ ನಾನು ಕೂಡ ಒಬ್ಬನಾಗಿ ಬೆರೆಯುತ್ತಿದ್ದೇನೆ.
ಶಾಸಕ ಹರ್ಷವರ್ಧನ್ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ತಂದೆಯ ಅಕಾಲಿಕ ನಿಧನದಿಂದ ಜನರ ಒತ್ತಾಯದ ಮೇರೆಗೆ ನನಗೆ ಟಿಕೆಟ್ ನೀಡಿದ್ದಾರೆ. ಹಿರಿಯ ನಾಯಕರು ಜನಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಅದಕ್ಕೆ ನಮ್ಮೆಲ್ಲರ ಕುಟುಂಬಸ್ಥರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ.
ಕಳೆದ ಮೂರು ದಿನಗಳಿಂದ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡುತ್ತಿದ್ದೇನೆ. ನನ್ನ ತಂದೆಯ ಮೇಲೆ ಇಟ್ಟಿರುವ ನಂಬಿಕೆಯನ್ನು ನನ್ನ ಮೇಲೆ ಇಡಲಿ, ನಾನು ಅವರ ಕಷ್ಟ ಸುಖಗಳಿಗೆ ಭಾಗಿಯಾಗುತ್ತೇನೆ ಎಂದು ತಿಳಿಸಿದರು. ದರ್ಶನ್ ಮಾದಾಪುರ, ದುಗ್ಗಹಳ್ಳಿ, ಹುರಾ, ಕೆಲ್ಲೂಪುರ, ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಿದ್ದಾರೆ.