ಮೈಸೂರು: ವಿಶ್ವದ ಪ್ರಮುಖ ಪ್ರಾಚೀನ ಭಾಷೆಗಳಲ್ಲೊಂದಾದ ಸುಮಾರು ಮೂರು ಸಾವಿರ ವರ್ಷಗಳ ಸುಧೀರ್ಘ ಚರಿತ್ರೆಯುಳ್ಳ ನಮ್ಮ ಕನ್ನಡ ಕರುಳ ಭಾಷೆಯಾಗಿದ್ದು ಈ ಸುಂದರ ಸುಲಲಿತ ಕನ್ನಡವು ಪ್ರತಿಯೊಬ್ಬರ ಕೊರಳ ಭಾಷೆಯಾಗಬೇಕೆಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು.
ನಗರದ ವಿದ್ಯಾರಣ್ಯಪುರಂನ ವಾಣಿ ವಿದ್ಯಾ ಮಂದಿರ ಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಮತ್ತು 50ನೇ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗ ಸಂಯುಕ್ತವಾಗಿ ಏರ್ಪಡಿಸಿದ್ದ ನುಡಿ ಸಂಭ್ರಮ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೀವನಕ್ಕಾಗಿ ನಾವು ಎಷ್ಟೇ ಭಾಷೆಗಳನ್ನು ಕಲಿತರೂ ಕೂಡ ನಮ್ಮ ನೆಲದೊಡಲಿನ ಕನ್ನಡ ನುಡಿಯೇ ಪ್ರತಿಯೊಬ್ಬರಿಗೂ ಸರ್ವಸ್ವವೆಂದರು.
ತನ್ನ ಮುದ್ದು ಮುದ್ದಾದ ಸುಂದರ ಅಕ್ಷರಗಳಿಂದ ಲಿಪಿಗಳರಾಣಿ ಎಂದು ಕರೆಸಿಕೊಳ್ಳುವ ಕನ್ನಡ ಭಾಷೆ ಕಲಿಯುವವರಿಗೆ ಸುಲಿದ ಬಾಳೆಹಣ್ಣಿನಂತೆ ಅತ್ಯಂತ ಸುಲಭವಾಗಿದ್ದು ಕನ್ನಡೇತರರೂ ಕೂಡ ಬಹುಬೇಗ ಕನ್ನಡವನ್ನು ಕಲಿಯಬಹುದಾಗಿದೆ. ಅತ್ಯಂತ ಹೆಚ್ಚು ಎನ್ನುವಂತೆ ಸಾಹಿತ್ಯ ಕ್ಷೇತ್ರದಲ್ಲಿ ದಾಖಲಾರ್ಹ ಪ್ರತಿಷ್ಠಿತ ಎಂಟು ಜ್ಞಾನಪೀಠ ಪ್ರಶಸ್ತಿಗಳ ಸಾಹಿತ್ಯ ಸಾಧಕರನ್ನು ಪಡೆದಿರುವ ನಮ್ಮ ಕನ್ನಡಮ್ಮ , ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ಜಾನಪದ, ವಿಜ್ಞಾನ, ಧಾರ್ಮಿಕ, ಕೃಷಿ, ಕ್ರೀಡೆ, ರಾಜಕೀಯ,ವೈದ್ಯಕೀಯ, ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನೂರಾರು, ಸಾವಿರಾರು ಸಾಧಕರನ್ನು ಸೃಷ್ಟಿಸಿದ್ದಾರೆ. ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಇದರ ಮೂಲಕ ಏನು ಬೇಕಾದರೂ ಸಾಧಿಸ ಬಹುದೆಂಬುದನ್ನು ಕನ್ನಡದ ಸಾಧಕ ಮಹನೀಯರು, ಪ್ರತಿಭಾ ಸಂಪನ್ನರು ಈಗಾಗಲೇ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದರು.
ಖ್ಯಾತ ಕಲಾವಿದೆ ಹಾಗೂ ಲೇಖಕಿ ಡಾ.ಜಮುನಾರಾಣಿ ಮಿರ್ಲೆ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕನ್ನಡ ನುಡಿ ಸಂಭ್ರಮವನ್ನು ಉದ್ಘಾಟಿಸಿದರು.
ಶ್ರೀವಾಣಿ ವಿದ್ಯಾ ಮಂದಿರದ ಆಡಳಿತಾಧಿಕಾರಿಗಳಾದ ಹೆಚ್. ಕೆ.ರಾಘವೇಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯೆ ಮತ್ತು ಕವಯತ್ರಿ ಹಾಗೂ ಗಾಯಕಿ ಡಾ.ಸ್ನೇಹಶ್ರೀ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಕಾವೇರಿ ಬಳಗದ ಅಧ್ಯಕ್ಷೆ, ವಿಶ್ರಾಂತ ಶಿಕ್ಷಕಿ ಎನ್. ಕೆ.ಕಾವೇರಿಯಮ್ಮ, ವಿಶ್ರಾಂತ ಶಿಕ್ಷಕರೂ ಆದ ಹಿರಣ್ಮಯಿ ಪ್ರತಿಷ್ಟಾನದ ಅಧ್ಯಕ್ಷ ಎ.ಸಂಗಪ್ಪ, ಮುಖ್ಯ ಶಿಕ್ಷಕ ಪರಶುರಾಮೇಗೌಡ, ಶಿಕ್ಷಕರಾದ ಶ್ರೀನಿವಾಸರಾವ್, ಎಂ.ಪ್ರಕಾಶ್, ಪವಿತ್ರಾ ಮುಂತಾದವರು ಉಪಸ್ಥಿತರಿದ್ದರು.