ಮೈಸೂರು: ಬರಗಾಲದ ಕಾರಣಕ್ಕೆ ರೈತರು ಸಂಕಷ್ಟಕ್ಕೀಡಾಗಿದ್ದು, ಪರಿಹಾರ ಕೇಳಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಕೇಂದ್ರದ ತಂಡವೂ ರಾಜ್ಯಕ್ಕೆ ಆಗಮಿಸಿ ಬರ ಅಧ್ಯಯನ ನಡೆಸಿದೆ. ಆದರೂ ಕೇಂದ್ರದಿಂದ ಪರಿಹಾರ ಹಣ ಬಂದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಬರ ಪರಿಹಾರ ಹಣದ ದುರ್ಬಳಕೆ ತಡೆಯುವ ಹಾಗೂ ರೈತರಿಗೆ ಶೀಘ್ರ ಪರಿಹಾರ ನೀಡುವ ಸಲುವಾಗಿ ರೈತರ ಜಮೀನಿನ ವಿಸ್ತೀರ್ಣದ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನವೀಕರಿಸುವಂತೆ ಆದೇಶಿಸಿ ಹಲವು ತಿಂಗಳಾಗಿದೆ. ಆದರೂ, ಮೈಸೂರಿನಲ್ಲಿ ಫ್ರೂಟ್ಸ್ ನವೀಕರಣ ಶೇ.75ರಷ್ಟು ಮೀರಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಫ್ರೂಟ್ಸ್ ತಂತ್ರಾಂಶ ನವೀಕರಿಸದೆ ರೈತರಿಗೆ ನ್ಯಾಯಯುತ ಪರಿಹಾರ ನೀಡುವುದು ಸಾಧ್ಯವಿಲ್ಲ. ರೈತರು ತಮ್ಮ ಜಮೀನಿನ ವಿಸ್ತೀರ್ಣ ನಮೂದಿಸಲು ಮುಂದಾಗದಿದ್ದರೆ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರು ಪತ್ರಿಕಾ ಪ್ರಕಟಣೆ ನೀಡಿ ರೈತರಲ್ಲಿ ಅರಿವು ಮೂಡಿಸಿ ಮುಂದಿನ ವಾರದಲ್ಲಿ ನವೀಕರಣದ ಕೆಲಸ ಮುಗಿಸಿ ಎಂದು ಗಡುವು ನೀಡಿದ ಅವರು, ರೈತರ ಆರ್ಟಿಸಿ ಜತೆಗೆ ಆಧಾರ್ ಲಿಂಕ್ ಜೋಡಣೆ ನಮ್ಮ ಮುಂದಿನ ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಬಗ್ಗೆ ಗಮನ ಸೆಳೆದ ಅವರು, ರಾಜ್ಯದಲ್ಲಿ ಸಣ್ಣ ರೈತರ ಸಂಖ್ಯೆ ಕನಿಷ್ಠ ಶೇ.77ರಷ್ಟಿದೆ. ಆದರೆ, ಕೇಂದ್ರ ಸರ್ಕಾರದ ಅಂಕಿ ಅಂಶದ ಪ್ರಕಾರ ಈ ಸಂಖ್ಯೆ ಕೇವಲ ಶೇ.44ರಷ್ಟು ಮಾತ್ರ. ಪರಿಣಾಮ ಕೇಂದ್ರದ ಮಾನದಂಡದ ಪ್ರಕಾರ ರಾಜ್ಯಕ್ಕೆ ಕನಿಷ್ಠ ಮೊತ್ತದ ಬರ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಸುವಾಗ ಅವರ ಆರ್ಟಿಸಿ ಜತೆಗೆ ಆಧಾರ್ ಲಿಂಕ್ ಮಾಡಬೇಕು. ಆ ಮೂಲಕ ಪರಿಹಾರದ ಹಣ ತಲುಪಿಸುವ ಜತೆಗೆ ರಾಜ್ಯದ ರೈತರ ನಿಖರ ಅಂಕಿಅಂಶ ಪಡೆಯಬಹುದು ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಆದರೆ, ಬೇಸಿಗೆಯಲ್ಲಿ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಈಗಲೇ ಖಾಸಗಿ ಟ್ಯಾಂಕರ್ ಹಾಗೂ ಬೋರ್ವೆಲ್ಗಳನ್ನು ಗುರುತಿಸಿ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.