ನಂಜನಗೂಡು: ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ, ನೂರಾರು ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕಪಿಲ ನದಿ ಮತ್ತು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೆರೆಕಟ್ಟೆಗಳು ಬತ್ತಿ ಹೋಗಿವೆ ಗದ್ದೆಗಳಲ್ಲಿ ಬೆಳೆಗಳು ಒಣಗುತ್ತಿವೆ. ಮೊದಲು ನಮಗೆ ನೀರು ಬಿಡಿ ಎಂದು ಒತ್ತಾಯ ಮಾಡಿದರು.
ಕಬಿನಿ ಬಲದಂಡೆ ನಾಲೆಯ ಮೂಲಕ ನೀರು ತಮಿಳುನಾಡಿಗೆ ಹೋಗುತ್ತಿದ್ದು, ಎಲ್ಲಾ ಅಣೆಕಟ್ಟೆಗಳನ್ನು ತಮಿಳುನಾಡಿಗೆ ಬರೆದು ಕೊಡಿ. ಕೇಂದ್ರ ಸರ್ಕಾರ ಕರ್ನಾಟಕದ ಪರವಾಗಿಲ್ಲ. ತಮಿಳುನಾಡು ಪರವಾಗಿದೆ. ಕೂಡಲೇ ನಮ್ಮ ಕೆರೆ ಕಟ್ಟೆಗಳಿಗೆ, ನಾಲೆಗಳಿಗೆ ಮೊದಲು ನೀರು ಬಿಡಿ.
ಮೇಕೆದಾಟು ಯೋಜನೆ ಮಾಡುವುದರಿಂದ ತಮಿಳುನಾಡು ಅಡ್ಡಗಾಲು ಹಾಕುತ್ತದೆ. ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳು ಒಟ್ಟಿಗೆ ಸೇರಿ ಕೆಲಸ ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ಕೂಡಲೇ ರಾಜ್ಯ ಸರ್ಕಾರ ನಮ್ಮ ನಾಲೆಗಳಿಗೆ, ಕೆರೆಕಟ್ಟೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್, ಕೆಂಪಣ್ಣ, ಶಂಕರ್ ನಾಯಕ, ಮಂಜುನಾಥ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.