ಮೈಸೂರು: ಸೆ.26ರಿಂದ ಅ.5ರವರೆಗೆ ನಡೆಯುವ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
ಈ ಕುರಿತಂತೆ ನಗರ ಪೊಲೀಸ್ ಕಮೀಷ್ನರ್ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದ ಲಕ್ಷಾಂತರ ಪ್ರವಾಸಿಗರು ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭದ್ರತೆ ಕೈಗೊಳ್ಳಲಾಗಿದೆ. ಜನಸ್ನೇಹಿಯಾಗಿ ಸಾರ್ವಜನಿಕರೊಂದಿಗೆ ಬೆರೆತು ಸೇವೆ ನೀಡಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಮೈಸೂರು ನಗರದ 1255, ಹೊರ ಜಿಲ್ಲೆಗಳ 3580, ಮತ್ತು 650ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5485 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ
ದಸರಾ ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿರುವ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ, ಹೆಚ್ಚುವರಿಯಾಗಿ ಅರಮನೆ, ಬನ್ನಿಮಂಟಪ ಮೈದಾನ, ಮೆರವಣಿಗೆ ಮಾರ್ಗ, ಇತರೇ ಪ್ರಮುಖ ಸ್ಥಳಗಳಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಇವುಗಳು ದಿನದ 24 ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ, 8 ತುರ್ತು ವಾಹನಗಳಗಳನ್ನು ನಿಯೋಜನೆ ಮಾಡಲಾಗಿದೆ. ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದ ಅಪರಾಧಿಗಳು ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ನುರಿತ ಅಪರಾಧ ವಿಭಾಗದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ವೃತ್ತಿ ನಿರತ ಹಳೆಯ ಪಿಕ್ ಪ್ಯಾಕೆಟರ್ಸ್ ಬ್ಯಾಗ್, ಸೂಟ್ಕೇಸ್ ಲಿಫ್ಟರ್ ಹಾಗೂ ಇತರೆ ಕಳುವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯಿದೆಯಡಿ ಕ್ರಮಕೈಗೊಳ್ಳಲಾಗುತ್ತಿದೆ.
ಈಗಾಗಲೇ ರೌಡಿಪಟ್ಟಿಯಲ್ಲಿರುವ ಹಲವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ದಸರಾ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನ ವ್ಯವಸ್ಥೆ ಮಾಡಲಾಗಿದೆ. ಮೊಬೈಲ್ ಕಮಾಂಡ್ ಸೆಂಟರ್ನ್ನು ಈ ಬಾರಿಯ ದಸರಾ ಮಹೋತ್ಸವದಲ್ಲಿ ಬಳಲಾಗುತ್ತದೆ. ಬಸ್ನಲ್ಲಿ ಸಿಸಿಟಿವಿ ವ್ಯವಸ್ಥೆ ಇದ್ದು, ಬಾಡಿವೋರ್ನ್ ಕ್ಯಾಮರಾಗಳು, ಲಾಂಗ್ ಡಿಸ್ಟೆನ್ಸ್ ವಿಡಿಯೋಗ್ರಫಿ ಮತ್ತು ಫೋಟೋಗ್ರಫಿ ವ್ಯವಸ್ಥೆ ಇರುತ್ತದೆ. ಅರಮನೆ ಮತ್ತು ಬನ್ನಿ ಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿಪೋರ್ಸ್ ಕ್ಯಾಮರಾ ವಿತರಿಸಲಾಗುತ್ತದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮರಾಗಳಿಂದ ಕಣ್ಗಾವಲು ಮಾಡಲಾಗುವುದು. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಪ್ಲಾಟ್ ಫಾರ್ಮ್ಗಳನ್ನು ನಿರ್ಮಿಸಿ ಅದರ ಮೇಲೆ ಪೊಲೀಸರನ್ನು ಮೆಗಾ ಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ.
ರೌಡಿ ಪರೇಡ್ ನಡೆಸಿ ರೌಡಿಗಳಿಗೆ ಅಹಿತಕರ ಘಟನೆ ನಡೆಸದಂತೆ ಕಟ್ಟೆಚ್ಚರ ನೀಡಲಾಗಿದೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ತುತ್ತೂರಿಗಳನ್ನು ನಿಷೇಧಿಸಲಾಗಿದೆ.
ಪ್ರವಾಸಿಗರಿಗೆ ಮಾಹಿತಿ ನೀಡಲು, ಸಾರ್ವಜನಿಕರಿಗೆ, ಅಗತ್ಯವಿರುವವರಿಗೆ ಪೊಲೀಸ್ ಸಹಾಯ ನೀಡಲು ನಗರದ 8 ಪ್ರಮುಖ ಸ್ಥಳಗಳಾದ ಜಗಜೀವನ್ ರಾಂ ವೃತ್ತ, ರೈಲ್ವೆ ನಿಲ್ದಾಣ, ಅರಮನೆ ವರಹಾ ಗೇಟ್, ಕೆ.ಆರ್.ವೃತ್ತ, ಸೆಂಟ್ ಫಿಲೋಮಿನಾ ಚರ್ಚ್, ಗ್ರಾಮಾಂತರ ಬಸ್ ನಿಲ್ದಾಣ, ಗಾಂಧಿವೃತ್ತ, ಮೈಸೂರು ಮೃಗಾಲಯ, ದಸರಾ ವಸ್ತು ಪ್ರದರ್ಶನ ಮುಖ್ಯದ್ವಾರ 8 ಕಡೆ ಪೊಲೀಸ್ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪೊಲೀಸ್ ಸಹಾಯಕೇಂದ್ರಕ್ಕೆ ನಿಯೋಜಿಸಿರುವ ಪೊಲೀಸರು, ಪ್ರವಾಸಿಮಿತ್ರರು, ಪ್ರವಾಸಿಗರಿಗೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಏಕಮುಖ ಸಂಚಾರ, ರಕ್ಷಣಾ ವ್ಯವಸ್ಥೆ ಕುರಿತು ಮಾಹಿತಿ ನೀಡಲಿದ್ದಾರೆ.
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಸೆ.26ರಿಂದ ಅ.5ರವರೆಗೆ ನಗರದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಅರಮನೆ ಸುತ್ತಮುತ್ತ ರಸ್ತೆಗಳು, ನ್ಯೂಎಸ್ಆರ್ ರಸ್ತೆ, ಬಿ.ಎನ್.ರಸ್ತೆ, ಬನುಮಯ್ಯ ರಸ್ತೆ, ತ್ಯಾಗರಾಜ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಗಳ ಬದಿಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸಲಾಗಿದೆ. ಕೆಎಸ್ಆರ್ಟಿಸಿ ಗ್ರಾಮಾಂತರ ಬಸ್ಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಅ.4 ಮತ್ತು 5ರಂದು ಸಾರಿಗೆ ಬಸ್ಗಳಿಗೆ ನಗರದ ಹೊರ ಭಾಗದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರ ಅನುಕೂಲಕ್ಕೆ ದಸರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳ ಸ್ಥಳದ ಬಳಿಯೇ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.