ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.28ರಂದು ನಂಜನಗೂಡಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಬುಧವಾರ ಸ್ಥಳ ಪರಿಶೀಲನೆ ನಡೆಸಿದರು.
ಅಂದು ಮುಖ್ಯಮಂತ್ರಿಗಳು ತಮ್ಮ ಭೇಟಿಯ ವೇಳೆ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಮತ್ತು ನುಗು ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಸ್ಥಳದಲ್ಲಿ ಅಗತ್ಯವಿರುವ ಸೌಲಭ್ಯಗಳು ಮತ್ತು ಪೊಲೀಸ್ ನಿಯೋಜನೆಗೆ ಸಂಬಂಧಿಸಿದ ವಿವರಗಳನ್ನು ಜಿಲ್ಲಾಧಿಕಾರಿ ಸಂಗ್ರಹಿಸಿದರು. ಇದಕ್ಕೂ ಮುನ್ನ ನಂಜನಗೂಡಿನ ತಾಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ರೈತರು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಶಾಸಕ ಬಿ.ಹರ್ಷವರ್ಧನ್, ಎಸ್ಪಿ ಆರ್.ಚೇತನ್, ನಂಜನಗೂಡು ತಹಶೀಲ್ದಾರ್ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.