ಮೈಸೂರು: ವಿಜಯಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದ್ದೇವೆ. ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಪರಿಣಾಮ ಬಿಜೆಪಿ ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜ್ಯದ ಜನರು ನಮ್ಮೊಂದಿಗೆ ಇರುವುದು ಸ್ಪಷ್ಟವಾಗುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.
ಮೋದಿ ಕಾರ್ಯಕ್ರಮಕ್ಕೆ ದುಡ್ಡು ಕೊಟ್ಟು ಜನರನ್ನು ಸೇರಿಸುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನವರಿಗೆ ಹಣ ಕೊಟ್ಟು ಜನರನ್ನು ಕರೆಸುವುದು ಅಭ್ಯಾಸವಾಗಿದೆ. ಹಾಗಾಗಿ ಬಿಜೆಪಿಯವರು ಹಣ ಕೊಟ್ಟು ಜನರನ್ನು ಕರೆಸುತ್ತಿದ್ದಾರೆಂದು ಹೇಳುತ್ತಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಅಪಾರ ಬೆಂಬಲದಿಂದ ವಿಚಲಿತರಾಗಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 500 ರೂಪಾಯಿ ಕೊಟ್ಟು ಜನರನ್ನು ಸಭೆಗೆ ಕರೆ ತರುವಂತೆ ಸಿದ್ದರಾಮಯ್ಯ ಹೇಳಿರುವುದನ್ನು ಜನರು ನೋಡಿದ್ದಾರೆ. ಅವರ ಮೇಲೆ ಬಂದಿರುವ ತಪ್ಪನ್ನು ಮರೆಮಾಚಲು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ನರೇಂದ್ರ ಮೋದಿ, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವ, ಸಂಘಟನೆ ಹಾಗೂ ನಾವು ಮಾಡಿರುವ ಅಭಿವೃದ್ಧಿ ಹಾಗೂ ನಾವು ಸಂಸ್ಕೃತಿ ಉಳಿಸಲು ಮಾಡುತ್ತಿರುವ ಯತ್ನಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ನಾಲ್ಕು ಅಂಶದ ಮೇಲೆ ಮತ ಕೇಳುತ್ತಿದ್ದು, ನಮ್ಮ ಭರವಸೆ ಕೇವಲ ಘೋಷಣೆಯಾಗಿರದೆ ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ ಎಂದರು.
ಅಲ್ಪಸಂಖ್ಯಾತರ ಮತಗಳ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಅಲ್ಪಸಂಖ್ಯಾತರ ಮತ ಬೇಡ ಎಂದು ಹೇಳಿಲ್ಲ. ಪಿಎಫ್ಐ, ಎಸ್ಡಿಪಿಐ ಮತಗಳು ನಮಗೆ ಬೇಕಾಗಿಲ್ಲ. ಭಯೋತ್ಪಾದನೆ ಬೆಂಬಲಿಸುವ ಸಂಘಟನೆಗಳು ನಮಗೆ ಮತ ಹಾಕುವುದೆ ಬೇಡ. ರಾಷ್ಟ್ರೀಯವಾದಿ ಮುಸ್ಲಿಮರು ನಮ್ಮೊಂದಿಗಿದ್ದು ನಮಗೆ ಮತ ಹಾಕುತ್ತಾರೆ ಎಂದರು.
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಂತರ ರೂಪಾಯಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದರ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಬಂದಿರುವವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರ ಮನೆ ಮೇಲೆ ರೇಡ್ ಆದಾಗ ಕಂತೆ ಕಂತೆ ನೋಟುಗಳು ಸಿಕ್ಕಿರುವುದನ್ನು ದೇಶವೇ ನೋಡಿದೆ. ಅವರು ಬೇಲ್ ಮೇಲಿದ್ದು, ಮತ್ತೆ ಯಾವಾಗ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ. ಪ್ರಕರಣದ ತನಿಖೆ ನಡೆಯಲಿದ್ದು, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.