ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ಗುರುವಾರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಕೈದಿಗಳಿಂದ ಮೊಬೈಲ್ ಫೋನ್, ಹಣ, ಗಾಂಜಾ, ಚಾಕು, ಕತ್ತರಿ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಎಂ.ಮುತ್ತುರಾಜು, ಎಸ್.ಜಾಹ್ನವಿ ನೇತೃತ್ವದಲ್ಲಿ ಎಸಿಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮಾದಕ ದ್ರವ್ಯ ಪತ್ತೆ ಶ್ವಾನದಳ ತಂಡ ರಚಿಸಿ ಕ್ಷಿಪ್ರ ದಾಳಿ ನಡೆಸಿದರು.
ದಾಳಿಯ ವೇಳೆ ಅಧಿಕಾರಿಗಳು ತಮ್ಮ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಂದ 15,000 ರೂಪಾಯಿ ನಗದು, 5 ಮೊಬೈಲ್ ಫೋನ್ಗಳು, 20 ಗ್ರಾಂ ಗಾಂಜಾ, ಚಾಕು, ಕತ್ತರಿ ಮತ್ತು ಚಮಚಗಳಿಂದ ತಯಾರಿಸಿದ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ದಾಳಿಯ ವೇಳೆ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸಿ. ದಿವ್ಯಶ್ರೀ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ದಾಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಮೈಸೂರು ಕೇಂದ್ರ ಕಾರಾಗೃಹದ ಹಿಂಭಾಗದಲ್ಲಿರುವ ಸ್ಮಶಾನದಿಂದ ಜೈಲು ಆವರಣದೊಳಗೆ ಗಾಂಜಾ ಮತ್ತಿತರ ವಸ್ತುಗಳನ್ನು ಎಸೆಯಲಾಗುತ್ತಿದೆ ಎಂಬ ವದಂತಿ ಇದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಜೈಲು ಸಿಬ್ಬಂದಿ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗಿದೆ ಎಂದರು.
ನಗರದ ಪ್ರಮುಖ ವೃತ್ತಗಳು, ಸಿಗ್ನಲ್, ಜಂಕ್ಷನ್ಗಳಲ್ಲಿ ಭಿಕ್ಷಾಟನೆ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದರು. 22 ಮಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ರೀತಿಯ ಕಾರ್ಯಾಚರಣೆ ನಡೆಸಲಾಗುವುದು ಎಂದು ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.