ಮೈಸೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಚುನಾವಣಾ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದ್ದಾರೆ.
ಮತಗಟ್ಟೆಗಳು ಹೆಚ್ಚಾಗಿ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಇರುತ್ತವೆ. ಈ ಸಂಬಂಧ ಮತಗಟ್ಟೆಗಳಲ್ಲಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ, ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಬೇಕು.
ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ರಾಂಪ್ ವ್ಯವಸ್ಥೆ, ವೀಲ್ಚೇರ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ಖುದ್ದಾಗಿ ಭೇಟಿ ನೀಡಿಬೇಕು. 2018ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಂಡು, ಹೆಚ್ಚಿನ ರೀತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ತಿಳಿಸಿದರಲ್ಲದೆ, ಮಾ.17, 18 ಹಾಗೂ 19ರಂದು ಜಿಲ್ಲೆಗೆ ಉಪಲೋಕಾಯುಕ್ತರು ಭೇಟಿ ನೀಡುತ್ತಿದ್ದು ಯಾವ ಯಾವ ಇಲಾಖೆಗಳಲ್ಲಿ ಲೋಕಾಯುಕ್ತ ಪ್ರಕರಣಗಳಿವೆಯೋ ಅವುಗಳನ್ನು ಗುರುತಿಸಿಕೊಳ್ಳಿ ಎಂದರು.
ಇದೇ ವೇಳೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿಯಂತ್ರ (ವಿ.ವಿ ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ ಮೂಡಿಸಲಾಯಿತು.
ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳಿಗೆ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.
ವಿಧಾನಸಭೆ ಚುನಾವಣೆಗೆ ಸಂಬಂಧಿತ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಒಟ್ಟು 5620 ಬ್ಯಾಲೆಟ್ ಯೂನಿಟ್, 3936ಕಂಟ್ರೋಲ್ ಯೂನಿಟ್, 4266 ವಿವಿಪ್ಯಾಡ್ಗಳು ಎಫ್ಎಸ್ಸಿಗೆ ಸಿದ್ಧವಾಗಿವೆ. ಜಿಲ್ಲೆಯ 2905 ಮತಗಟ್ಟೆಗಳ ಪೈಕಿ 1816 ಸ್ಥಳಗಳಲ್ಲಿ ಸುಗಮ ಚುನಾವಣೆಗೆ ಬೇಕಾದ ಎಲ್ಲಾ ಮೂಲ ಸೌಕರ್ಯ ಕಲ್ಪಿಸಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಈ ಕಾರ್ಯ ಪೂಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.