ಮೈಸೂರು: ಜಿಲ್ಲೆಯಲ್ಲಿ ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನದಡಿ ಜಿಲ್ಲೆಯಲ್ಲಿರುವ 0-5 ವರ್ಷದೊಳಗಿನ ಎಲ್ಲ ಮಕ್ಕಳು, ಗರ್ಭಿಣಿ ಹಾಗೂ ಬಾಣಂತಿಯರಿಗೆ ರೋಗನಿರೋಧಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮೇಟಗಳ್ಳಿಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತೀವ್ರತರ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದ್ರಧನುಷ್ ಒಂದು ಯೂನಿವರ್ಸಲ್ ಇಮ್ಯುನೈಜೇಷನ್ ಲಸಿಕಾ ಕಾರ್ಯಕ್ರಮವಾಗಿದ್ದು, ಬಾಣಂತಿಯರು ಗರ್ಭಿಣಿಯರು ಹಾಗೂ 0.5 ವರ್ಷದೊಳಗಿರುವ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಉzಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಕಾಯಿಲೆ ಬಂದ ಮೇಲೆ ಚಿಂತಿಸುವ ಬದಲು ಕಾಯಿಲೆ ಬರದಂತೆ ಎಚ್ಚರವಹಿಸುವುದು ಉತ್ತಮ. ಅಂತೆಯೇ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತಾ ರೋಗ ಬರದಂತೆ ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಮಾರಣಾಂತಿಕ ಕಾಯಿಲೆಗಳಿಂದ ಜನರನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಲೇ ಇವೆ. ಆದರೂ ಕೆಲವು ಕಡೆಗಳಲ್ಲಿ ಮೈಗ್ರೇಂಟ್ ಲೇಬರ್, ಕಟ್ಟಡ ಕಾರ್ಮಿಕರು, ಅನಕ್ಷರಸ್ಥರು, ಗರ್ಭಿಣಿಯರು ಹಾಗೂ ಮಕ್ಕಳನ್ನು ಸೇರಿದಂತೆ ಹಲವು ಮಂದಿ ಲಸಿಕೆಯನ್ನು ಪಡೆದುಕೊಂಡಿರುವುದಿಲ್ಲ. ಇಂತಹವರನ್ನು ಗುರುತಿಸಿ ಲಸಿಕೆ ಕೊಡಿಸುವುದು ಸವಾಲಿನ ಕೆಲಸ. ಈ ವಿಷಯದಲ್ಲಿ ಜಿಲ್ಲೆಯ ಎಲ್ಲ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸುತ್ತೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಮರ್ ನಾಥ್ ಇತರರು ಭಾಗವಹಿಸಿದ್ದರು.