ಮೈಸೂರು: ರೈತರು ಸಮಗ್ರ ಕೃಷಿಯತ್ತ ಅವಲಂಬನೆಯಾಗುವ ಜತೆಗೆ ಉಪ ಕಸುಬುಗಳನ್ನು ಕೈಗೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಲಹೆ ನೀಡಿದರು.
ನಗರದ ಜೆ.ಕೆ.ಮೈದಾನದ ಆವರಣದಲ್ಲಿರುವ ಜೆ.ಕೆ. ಅಲ್ಯೂಮಿನಿಯಂ ಅಸೋಸಿಯೇಷನ್ ಸಭಾ ಭವನದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ರೈತ ಸಂವಾದ ಮತ್ತು ಪ್ರಗತಿ ಪರ ರೈತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ತಮಗಿರುವ ಜಮೀನನಲ್ಲೇ ಸಮಗ್ರ ಕೃಷಿ ಮಾಡಿ ಲಾಭಗಳಿಸಿ ಸ್ವಾವಲಂಬಿಗಳಾಗಿ ನೆಮ್ಮದಿಯ ಜೀವನ ನಡೆಸಬೇಕು. ಕೃಷಿ ಕೀಳು ಎಂಬ ಮನೋಭಾವನೆಯನ್ನು ತೊಡೆದು ಯುವಕರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ರೈತರಿಗೆ ಕೃಷಿಯಲ್ಲಿ ಉತ್ತೇಜನ ನೀಡಲು ಬಿತ್ತನೆ ಬೀಜ, ರಸಗೊಬ್ಬರ, ಯಂತ್ರೋಪಕರಣ ಹಾಗೂ ಸ್ಪಿಂಕ್ಲರ್ ಸೇರಿದಂತೆ ವಿವಿಧ ಸಬ್ಸಿಡಿ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಕೇಂದ್ರದಿಂದ 6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ 4 ಸೇರಿ ಒಟ್ಟು 10 ಸಾವಿರ ರೂ.ಗಳನ್ನು ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗಲು ನೀಡಲಾಗುತ್ತಿದೆ ಸರ್ಕಾರ ಯಾವಾಗಲು ರೈತರ ಪರವಾಗಿದೆ ಎಂದು ಹೇಳಿದರು.
ದೇಶದಲ್ಲೇ ಮೊದಲ ಬಾರಿಗೆ ಪ್ರೌಢ ಶಿಕ್ಷಣದಿಂದ ಉನ್ನತ ಶಿಕ್ಷಣ ಪಡೆಯುವ ರೈತರ ಮಕ್ಕಳಿಗೆ ನೆರವಾಗಲು ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಜಾರಿಗೆ ತಂದು 14 ಲಕ್ಷ ಮಕ್ಕಳಿಗೆ 600 ಕೋಟಿ ನೀಡಲಾಗಿದೆ. ಕೃಷಿ ಶಿಕ್ಷಣದಲ್ಲಿ ರೈತರ ಮಕ್ಕಳಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ, ಮೀನುಗಾರಿಕೆ ಹಾಗೂ ಅರಣ್ಯ ಕೃಷಿಯಲ್ಲಿ ಸಾಧನೆ ಮಾಡಿದ ಜಿಲ್ಲೆಯ ರೈತರಿಗೆ ಕೃಷಿ ಪಂಡಿತ ಮತ್ತು ಉದಯೋನ್ಮುಖ ಕೃಷಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮಹಾಪೌರರಾದ ಶಿವಕುಮಾರ್, ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಎಂ.ಕೃಷ್ಣರಾಜು, ಕಾರ್ಯಾಧ್ಯಕ್ಷ ಡಾ.ಬಿ.ಎಸ್.ಚಂದ್ರಶೇಖರ್, ಸದಸ್ಯ ಕಾರ್ಯದರ್ಶಿ ಡಾ.ಷಡಕ್ಷರ ಮೂರ್ತಿ, ರೈತ ದಸರಾ ಉಪ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.