ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಇವುಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಹೆಚ್.ಆರ್.ನವೀನ್ ಕುಮಾರ್ ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶ್ರೀಮಂತ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ. ಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸ ಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡವಿಟ್ ಸಲ್ಲಿಸಿದೆ. ಅಲ್ಲದೆ ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಕರಾಳ ಕೃಷಿ ಕಾನೂನನ್ನು ತಂದಿತ್ತು. ಅದನ್ನು ಧೀರೋದ್ದಾತ ಹೋರಾಟದ ಮೂಲಕ ತಡೆಹಿಡಿಯಲಾಯಿತು ಎಂದರು.
ಆದರೆ, ಮೋದಿ ಸರ್ಕಾರ ಪುನಃ ಕರಾಳ ಕಾಯಿದೆಯನ್ನು ತರಲು ಹುನ್ನಾರ ನಡೆಸುತ್ತಿದೆ. ಇದನ್ನು ಹಿಮ್ಮೆಟ್ಟಿಸಲು ನಾವು ಸಂಘಟಿತರಾಗಬೇಕು. ಅಲ್ಲದೆ ಭೂಮಿಗಾಗಿ 50-60 ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ನೆರವಾಗಬೇಕು ಎಂದು ಹೇಳಿದರು.
ರೈತರಿಗೆ ಸಾಗುವಳಿ ಪತ್ರ ನೀಡದೆ ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ ಅದೇ ಸಾಗುವಳಿ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ನೀಡಲು ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ ಖಾಸಗಿ ಸಂಘ ಸಂಸ್ಥೆಗಳಿಗೆ ನೀಡುತ್ತಿದ್ದಾರೆ. ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಅಣಿಯಾಗಬೇಕಾಗಿದೆ ಎಂದರು.
ಇದಕ್ಕೂ ಮುನ್ನ ರಾಮಸ್ವಾಮಿ ವೃತ್ತದಿಂದ ಬುದ್ದ ವಿಹಾರದವರೆಗೆ ಮೆರವಣಿಗೆ ನಡೆಸಲಾಯಿತು.