ಮೈಸೂರು: ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, 16 ಉಪ ಸಮಿತಿಗಳನ್ನು ರಚನೆ ಮಾಡಲಾಗಿದ್ದು ಆ ಮೂಲಕ ದಸರಾವನ್ನು ಬ್ರ್ಯಾಂಡ್ ಮೈಸೂರು ಮಾಡಲು ಯೋಜನೆ ತಯಾರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತಿದೆ. ಕೋವಿಡ್ನಿಂದ ಕಳೆದ ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು, ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುವ ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.
ಈ ಬಾರಿಯ ದಸರಾದಲ್ಲಿ ದೇಶ, ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. 15ದಿನ ಮುಂಚಿತವಾಗಿ ವಸ್ತುಪ್ರದರ್ಶನ ಆರಂಭವಾಗಲಿದೆ. ದಸರಾ ಸಂಬಂಧ ಸಾಕಷ್ಟು ಪ್ರಚಾರ ನೀಡುವ ಕುರಿತು ಚರ್ಚೆಯಾಗಿದೆ. ಸಭೆಯಲ್ಲಿ ಕಾರ್ಯಕ್ರಮಗಳ ಆಯೋಜನೆ, ದೀಪಾಲಂಕಾರ, ವಸ್ತುಪ್ರದರ್ಶನ, ಪುಷ್ಪಪ್ರದರ್ಶನ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಯಿತು. ಆದರೆ ಪಾಸ್ ವಿತರಣೆ ವಿಷಯದಲ್ಲಿ ಯಾವುದೇ ಗೊಂದಲಕ್ಕೆ, ದುರ್ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು.
ಇದಕ್ಕೂ ಮುನ್ನ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಸರಾ ಕಾರ್ಯಕ್ರಮ ಆಯೋಜನೆ, ಅನುದಾನ ಬಿಡುಗಡೆ ಕುರಿತು ಚರ್ಚೆ ನಡೆಯಿತು. ಈ ಬಾರಿಯ ದಸರಾದಲ್ಲಿ ಪ್ರವಾಸೋದ್ಯಮ, ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಒತ್ತು ನೀಡುವುದು ಮಾತ್ರವಲ್ಲದೆ ಬ್ರ್ಯಾಂಡ್ ಮೈಸೂರು ಮಾಡಲು ಎಲ್ಲಾ ತರಹದ ಯೋಜನೆ ರೂಪಿಸುವಂತೆ ಸಚಿವರು ಸಲಹೆ ನೀಡಿದರು.
ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಆ.7ರಂದು ಬೆಳಗ್ಗೆ 9.01ರಿಂದ 9.35 ಕನ್ಯಾ ಲಗ್ನದಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ.
ಅಂದು ಬೆಳಗ್ಗೆ 9.20ರಿಂದ 10ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ. ಎರಡು ತಂಡಗಳಲ್ಲಿ 14 ಆನೆಗಳ ಆಗಮನವಾಗಲಿದೆ. ಮೊದಲ ತಂಡದಲ್ಲಿ 9, ಎರಡನೇ ತಂಡದಲ್ಲಿ 5 ಆನೆಗಳು ಆಗಮಿಸಲಿದೆ. ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ 3 ಆನೆಗಳನ್ನು ಕಳುಹಿಸಿಕೊಡಲಿದ್ದು ಉಳಿದ 11 ಆನೆಗಳು ಮೈಸೂರು ದಸರಾ ಮಹೋತ್ಸವದಲ್ಲಿ ಹೆಜ್ಜೆಹಾಕಲಿವೆ ಎಂದರು.
ಇದೇ ವೇಳೆ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿ ಒಳಗೊಂಡ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು. ಶಾಸಕರಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರುಗಳಾದ ವಿಶ್ವನಾಥ್, ಮಂಜೇಗೌಡ, ಡಾ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಆಯುಕ್ತ ಚಂದ್ರಗುಪ್ತ, ಎಸ್.ಪಿ.ಚೇತನ್ ಸೇರಿದಂತೆ ಹಲವು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.