ಮೈಸೂರು: ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಎಲ್ಲಿ ಅನ್ಯಾಯ ನಡೆದರೂ ಖಂಡಿಸಬೇಕು. ಅದರಲ್ಲೂ ಜಾತೀಯತೆ ಮತ್ತು ಭ್ರಷ್ಟಾಚಾರದ ವಿರುದ್ಧ ಸದಾ ಹೋರಾಟ ಮಾಡಬೇಕು ಎಂದು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಹಾಗೂ ಸಾಹಿತಿ ಟಿ. ಸತೀಶ್ ಜವರೇಗೌಡ ಹೇಳಿದರು.
ತಾಲ್ಲೂಕಿನ ವರಕೋಡು ಗ್ರಾಮದಲ್ಲಿ ಮೈಸೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಜಯಲಕ್ಷ್ಮಿ ಪುರಂನ ವಿಶ್ವಕವಿ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆಯುತ್ತಿರುವ ಎನ್.ಎಸ್.ಎಸ್. ವಾರ್ಷಿಕ ಶಿಬಿರದಲ್ಲಿ ‘ವಿದ್ಯಾರ್ಥಿ ಯುವಜನರ ವ್ಯಕ್ತಿತ್ವ ವಿಕಸನ’ ಕುರಿತು ಅವರು ಉಪನ್ಯಾಸ ನೀಡಿ ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ಸೂಕ್ತವಾಗಿ ಸ್ಪಂದಿಸಿ ಕೆಲಸ ಮಾಡಿಕೊಡದಿದ್ದರೆ, ವಿಳಂಬ ನೀತಿ ಅನುಸರಿಸಿದರೆ, ಲಂಚಕ್ಕಾಗಿ ಬೇಡಿಕೆ ಇಟ್ಟರೆ, ಇದರ ವಿರುದ್ಧ ವಿದ್ಯಾರ್ಥಿಗಳು ಪ್ರತಿರೋಧ ವ್ಯಕ್ತಪಡಿಸಬೇಕು. ಸಕಾಲ, ಮಾಹಿತಿ ಹಕ್ಕು ಮತ್ತು ಲೋಕಾಯುಕ್ತ ಸಂಸ್ಥೆಯ ಮೂಲಕ ಭ್ರಷ್ಟಾಚಾರಿಗಳಿಗೆ ತಕ್ಕ ಪಾಠ ಕಲಿಸುವ ಕೆಲಸಕ್ಕೆ ಮುಂದಾಗಬೇಕು ಎಂದರು.
ವಿದ್ಯಾರ್ಥಿಗಳು ಪಠ್ಯಪುಸ್ತಕಗಳನ್ನಷ್ಟೇ ಓದಿ ಹೆಚ್ಚು ಅಂಕಗಳನ್ನು ಪಡೆದರೆ ಸಾಲದು. ವೈಚಾರಿಕತೆ, ಮಾನವತೆ, ಸಮತೆ ಮತ್ತು ಸಾಮರಸ್ಯದ ಭಾವನೆಗಳನ್ನು ಬೆಳೆಸುವ ಸಾಹಿತ್ಯ ಕೃತಿಗಳನ್ನು ಹೆಚ್ಚು ಹೆಚ್ಚಾಗಿ ಓದುವ ಹವ್ಯಾಸ ಬೆಳೆಸಿಕೊಂಡು ಗ್ರಾಮೀಣ ಜನತೆಯ ಬಗ್ಗೆ ಪ್ರೀತ್ಯಾದರ ತೋರಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಅದಮ್ಯ ರಂಗಶಾಲೆಯ ಕಾರ್ಯದರ್ಶಿ ಹಾಗೂ ರಂಗಕರ್ಮಿ ಚಂದ್ರು ಮಂಡ್ಯ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಶಿಬಿರದದ ಸಂದರ್ಭದಲ್ಲಿ ರೈತರಿಗೆ ಅಗತ್ಯವಿರುವ ಮಾಹಿತಿಗಳನ್ನು ಒದಗಿಸಿ, ಅವರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕು. ಮೊಬೈಲ್ ಬಳಕೆಯ ಗೀಳನ್ನು ಕಡಿಮೆ ಮಾಡಿ ಓದಿನತ್ತ ಗಮನಹರಿಸಬೇಕು ಎಂದರು.
ವೇದಿಕೆಯಲ್ಲಿ ಜಾನಪದ ಗಾಯಕ ಡಾ. ಎಸ್. ಸೋಮಶೇಖರ್, ಮಹಾರಾಜ ಕಾಲೇಜಿನ ಉಪನ್ಯಾಸಕ ಡಾ.ಟಿ.ಎನ್. ಪುಟ್ಟರಾಜು, ಯುವಕವಿ ಡಾ. ಮಹಾದೇವ ಮೂರ್ತಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿ ಎಸ್. ಆನಂದ, ಸಹ ಶಿಬಿರಾಧಿಕಾರಿ ಸಿ. ಧರ್ಮೇಂದ್ರ ಉಪಸ್ಥಿತರಿದ್ದರು.