ನಂಜನಗೂಡು: ನಂಜನಗೂಡು ನಗರದ ನಂದಿ ಭವನದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ ನಡೆಸಲಾಯಿತು.
ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ರವರು, ಜ. 26 ರಂದು ಮೈಸೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಗಣ್ಯರು ಆಗಮಿಸಲಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬರಬೇಕು ಎಂದು ಮನವಿ ಮಾಡಿದರು.
ಸಾಲ ಮಾಡಿರೋದು ಬಿಜೆಪಿಯವರ ದೊಡ್ಡ ಸಾಧನೆಯಾಗಿದೆ. ಬಿಜೆಪಿ ಒಳ್ಳೆಯ ಆಡಳಿತ ನೀಡಿಲ್ಲ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು ಏನು ಮಾಡಿಲ್ಲ ಅಭಿವೃದ್ಧಿಗೆ ಬೆಳಕು ಚೆಲ್ಲಿದವರು ನಾವು ಭವ್ಯ ಭಾರತ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿಯವರು ಪಾದಯಾತ್ರೆಯನ್ನು ಚುನಾವಣೆಗೆ ಮಾಡಿಲ್ಲ. ಒಡೆದ ಮನಸ್ಸುಗಳನ್ನು ಒಂದು ಮಾಡಲು ಪಾದಯಾತ್ರೆ ಮಾಡಿದ್ದೇವೆ. ಭ್ರಷ್ಟಾಚಾರ, ಸರ್ಕಾರದ ಆಡಳಿತ ಕುಸಿದಿದೆ. ಬೆಲೆ ಏರಿಕೆ, ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಟೀಕೆ ಮಾಡುವ ನೈತಿಕತೆ ಇಲ್ಲ. ಚುನಾವಣೆ ಪೂರ್ವದಲ್ಲಿ 600 ಭರವಸೆಗಳನ್ನು ನೀಡಿದ್ದರು. 60 ಭರವಸೆಯನ್ನು ಸಹ ಈಡೇರಿಸಿಲ್ಲ. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಕಂಡು ಅವರಿಗೆ ಭಯ ಶುರುವಾಗಿದೆ. ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿ.ಪಂ ಮಾಜಿ ಸದಸ್ಯ ಮಾರುತಿ, ಕುರಹಟ್ಟಿ ಮಹೇಶ್, ನಾಗೇಶ್ ರಾಜ್, ಜಯಮಾಲಾ, ಲತಾಸಿದ್ದಶೆಟ್ಟಿ, ಉಪ್ಪನಹಳ್ಳಿ ಶಿವಣ್ಣ, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.