ಮೈಸೂರು: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಸಂಬಂಧ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ತಿಳಿಸಿದರು.
ಮೈತ್ರಿ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ನಮ್ಮ ಪಕ್ಷಕ್ಕೆ ಬೇಸರ ತರಿಸಿದೆ. ನಾವು ಕಾಂಗ್ರೆಸ್ ಪಕ್ಷದವರ ಧೋರಣೆಯಿಂದ ಬೇಸತ್ತಿವೆ. ಕಾಂಗ್ರೆಸ್ ಜತೆ ನಮಗೆ ಮೈತ್ರಿ ಬೇಡ ಅನಿಸಿದೆ. ಹಾಗೆಯೇ ಬಿಜೆಪಿ ಜೊತೆ ಸಖ್ಯ ಬೆಳೆಸುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಆದರೆ ಈ ಬಾರಿ ಮೇಯರ್ ಹುದ್ದೆ ಜೆಡಿಎಸ್ಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ಆ.24ರಂದು ಸರ್ಕಾರ ಮೀಸಲಾತಿ ಪ್ರಕಟಿಸಿತ್ತು. ನಂತರ 25ರಂದು ಚುನಾವಣೆಗೆ ದಿನಾಂಕ ನಿಗದಿ ಮಾಡಿದ್ದು, ಸೆ.6ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.