ಮೈಸೂರು: ನಗರದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದ ನಂತರ ಎಚ್ಚೆತ್ತಿರುವ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲಾದ್ಯಂತ ಪರಿಶೀಲನಾ ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಪ್ರತಾಪ್ಸಿಂಹ ಮಾತನಾಡಿ ಕೆಲ ದಿನಗಳಿಂದ ಮಾಧಮಗಳಲ್ಲಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಡೆದಿರುವ ಬಗ್ಗೆ ವರದಿಯಾಗುತ್ತಿದೆ. ಸಂಬಂಧಪಟ್ಟ ಆಸ್ಪತ್ರೆ ಬಗ್ಗೆ ಮಾಹಿತಿ ಇದೆಯಾ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್ಒ, ನಗರದಲ್ಲಿ ಮಾತಾ ಆಸ್ಪತ್ರೆ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿಲ್ಲ. ನಾಲ್ಕು ತಿಂಗಳ ಹಿಂದೆ ನೋಂದಣಿಗೆ ಅರ್ಜಿ ಹಾಕಿದ್ದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮಾತಾ ಆಸ್ಪತ್ರೆಯ ಬಾಗಿಲು ಬಂದ್ ಆಗಿತ್ತು. ಆದ್ದರಿಂದ ನಮ್ಮವರು ಅನುಮತಿ ನೀಡಿಲ್ಲ ಎಂದು ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಖಾಸಗಿ ಆಸ್ಪತ್ರೆ, ಕ್ಲಿನಿಕ್, ಆಸ್ಪತ್ರೆ, ಲ್ಯಾಬ್ ಹಾಗೂ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ನಿಗಾ ಇಡುವುದು ಮತ್ತು ಅವುಗಳ ಕಾರ್ಯಾಚರಣೆ ಬಗ್ಗೆ ತಿಳಿಯಲು ಜಿಲ್ಲಾದ್ಯಂತ ಪರಿಶೀಲನೆ ನಡೆಸಲಾಗುವುದು. ಗ್ರಾಮೀಣ ಮಟ್ಟದಲ್ಲಿ ತಾ.ಪಂ ಇಒಗಳು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಪಂ ಪಿಡಿಒಗಳೊಂದಿಗೆ ತೆರಳಿ ಕ್ಲಿನಿಕ್, ಆಸ್ಪತ್ರೆ, ಲ್ಯಾಬ್ಗಳಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಿ, ವೈದ್ಯರ ವಿದ್ಯಾರ್ಹತೆ, ಅನುಮತಿ ಪತ್ರ ಎಲ್ಲವನ್ನು ಪರಿಶೀಲಿಸಲಿದ್ದಾರೆ. ಒಂದು ವೇಳೆ ಅವರಿಗೆ ಅನುಮತಿ ಇಲ್ಲದೆ, ಯಾರಾದರೂ ಕ್ಲಿನಿಕ್ ಹಾಗೂ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜತೆಗೆ ಟ್ರೇಡ್ ಲೈಸ ರದ್ದು ಮಾಡಲಾಗುವುದು. ಜತೆಗೆ ಅಂತಹವರಿಗೆ ಬಾಡಿಗೆ ನೀಡಿದ ಮಾಲೀಕರ ಮೇಲೂ ಕ್ರಮ ಜರುಗಿಸಲಾಗುವುದು ಎಂದರು.
ನಗರ ವ್ಯಾಪ್ತಿಯಲ್ಲಿ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ವೈದ್ಯಕೀಯ ಸೇವೆ ಹೆಸರಿನಲ್ಲಿ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಭ್ರೂಣ ಹತ್ಯೆ ಸಂಬಂಧ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಭಾಗಿ ಇದ್ದರೆ ಅವರ ವಿರುದ್ಧವೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.