ನಂಜನಗೂಡು: ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಹುಣ್ಣಿಮೆಯ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸುವ ಮುನ್ನ, ಚಾತುರ್ಮಾಸ ಹಿನ್ನೆಲೆಯಲ್ಲಿ ನಂಜನಗೂಡಿನ ಕಪಿಲಾ ನದಿಯಲ್ಲಿ ಸಂಕಲ್ಪ ಮಾಡಿ, ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಶ್ರೀ ನಂಜುಂಡೇಶ್ವರ ದೇವಾಲಯಕ್ಕೆ ಆಗಮಿಸಿದರು.
ದೇವಾಲಯಕ್ಕೆ ಆಗಮಿಸಿದ ಪೇಜಾವರ ಶ್ರೀಗಳಿಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮಂಗಳವಾದ್ಯದೊಂದಿಗೆ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು.
ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಶ್ರೀಗಳಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು ಬಳಿಕ ಮಾತನಾಡಿದ ಶ್ರೀಗಳು, ನಂಜುಂಡೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿ ಚಾತುರ್ಮಾಸದ ಸಂಕಲ್ಪವನ್ನು ಮಾಡಿ ನಂಜುಂಡೇಶ್ವರನ ದರ್ಶನವನ್ನು ಪಡೆದಿದ್ದೇನೆ. ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಬಳಿಕ ನಂಜನಗೂಡಿನ ರಾಘವೇಂದ್ರ ಮಠ, ಅಗ್ರಹಾರ ಕೃಷ್ಣ ದೇವಾಲಯಕ್ಕೂ ತೆರಳಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ್ದಾರೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.