ನಂಜನಗೂಡು: ನಗರದಲ್ಲಿ ಜೆಡಿಎಸ್ ನ ಹಿರಿಯ ಮುಖಂಡರು, ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಜೆಡಿಎಸ್ ಜಿಲ್ಲಾಧ್ಯಕ್ಷರ ಸಹೋದರ ಎನ್.ಶ್ರೀನಿವಾಸ್ ಅವರೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನೇತೃತ್ವದಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕೈ ಹಿಡಿದಿದ್ದಾರೆ.
ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರುಗಳಿಗೆ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಪಕ್ಷದ ಶಲ್ಯ ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತಿಸಿ ಬರಮಾಡಿಕೊಂಡರು.
ಕಾರ್ಯಕ್ರಮಕ್ಕೆ ಬಂದ ಧ್ರುವನಾರಾಯಣ್ ಅವರನ್ನು ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಮಾಲಾರ್ಪಣೆ ಮಾಡಿ ಸಂಭ್ರಮದಿಂದ ಬರಮಾಡಿಕೊಂಡರು.
ಬಳಿಕ ಮಾಜಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮಾತನಾಡಿ, ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ನಂಜನಗೂಡಿನಲ್ಲಿ ನಮ್ಮ ಪಕ್ಷಕ್ಕೆ ಬಲ ಬಂದಂತಾಗಿದೆ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ನ ಇನ್ನು ಹಲವಾರು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮುಖಂಡ ಶ್ರೀನಿವಾಸ್ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಇಂದು ಕಾಂಗ್ರೆಸ್ ನಾಯಕರಾದ ಧ್ರುವನಾರಾಯಣ್ ಅವರ ಸಮ್ಮುಖದಲ್ಲಿ ನಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಇಲ್ಲಿ ಧ್ರುವನಾರಾಯಣ ಅವರೇ ಅಭ್ಯರ್ಥಿಯಾಗುತ್ತಾರೆ ಅವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಶ್ರೀಕಂಠ ನಾಯಕ, ಹಾಡ್ಯ ರಂಗಸ್ವಾಮಿ ಮುಖಂಡರಾದ ಮಂಜುನಾಥ್, ಶ್ರೀಧರ್ ನಗರಸಭೆ ಸದಸ್ಯರಾದ ಶ್ವೇತ ಲಕ್ಷ್ಮಿ ಸತೀಶ್ ಗೌಡ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವಾರು ಮುಖಂಡರು ಉಪಸ್ಥಿತರಿದ್ದರು.