ಮೈಸೂರು: ನಗರದಲ್ಲಿ ಬಿಜೆಪಿಯಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಆವೇಶಪೂರಿತ, ಭಾವುಕ ಭಾಷಣ ಮಾಡಿದ ಬಳಿಕ ಕೆಲವೇ ಸಮಯದಲ್ಲಿ ಸಭೆಯಿಂದ ನಿರ್ಗಮಿಸಿದ ಪ್ರಸಂಗ ನಡೆದಿದ್ದು, ಇದು ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತಿಗೆ ಪುಷ್ಠಿ ನೀಡಿದಂತಾಗಿದೆ.
ನಗರದ ಬೋಗಾದಿ ಬಳಿಯ ಕಲ್ಯಾಣ ಮಂಟಪವೊಂದರಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಉಸ್ತುವಾರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಹಳೇ ಮೈಸೂರು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ಪ್ರತಾಪಸಿಂಹ. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತೆ. ನಾನು ರಿಯಲ್ ಎಸ್ಟೇಟ್ ಮಾಡ್ಲಿಲ್ಲ, ಕಮಿಷನ್ ಪಡೆದಿಲ್ಲ. ಬಟ್ಟಂಗಿಗಳನ್ನು ಕಟ್ಟಿಕೊಂಡು ಓಡಾಡಲಿಲ್ಲ. ಅಭಿವೃದ್ಧಿ ಮಾತ್ರ ಮಾಡಿದ್ದೇನೆ ಎಂದು ಸ್ವಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ಹತ್ತು ವರ್ಷದಲ್ಲಿ ಎಂದಿಗೂ ಅಡ್ಜಮೆಂಟ್ ಪಾಲಿಟಿಕ್ಸ್ ಮಾಡಲಿಲ್ಲ. ಈ ಹಿಂದೆ ಬಿಜೆಪಿಯಿಂದ ಗೆದ್ದವರು ಪಕ್ಷವನ್ನು ಹೇಗೆ ಕಟ್ಟಿದ್ರು, ಎಷ್ಟು ಜನರನ್ನು ಬೆಳೆಸಿದ್ದಾರೆ ಹೇಳಿ? ನಾನು ಪಲಾನಯನವಾದಿಯಲ್ಲ. ನಿಮ್ಮ ಜೊತೆ ನಾನು ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಗಾಸಿಪ್ಗಳನ್ನು ಹರಡಬೇಡಿ ಎಂದು ಭಾವುಕರಾದ ಅವರು, ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ. ರಾಜು ಕೊಲೆಯಾದಾಗ ಧೈರ್ಯದಿಂದ ಹೋರಾಟ ಮಾಡಿದ್ದೇನೆ. ಕೊಡಗು-ಮೈಸೂರು ಬಿಜೆಪಿಯ ಭದ್ರ ಕೋಟೆ. ಇವತ್ತು ನನಗೆ ಟಿಕೆಟ್ ಕೊಟ್ಟರೆ ಮೂರು ಲಕ್ಷ ಮತಗಳ ಅಂತರಿಂದ ಗೆಲ್ಲುತ್ತೇನೆ. ಎಲ್ಲಾ ಪಕ್ಷಗಳ ಬೆಂಬಲಿತ ಅಭ್ಯರ್ಥಿ ನಾನು ಎಂದರು.
ಇಷ್ಟು ಒಳ್ಳೆಯ ಕೆಲಸ ಮಾಡಿದ್ದೇನೆ, ಮುಂದೆಯೂ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಮುಂದೆ ಅವಕಾಶ ಸಿಕ್ಕರೆ ಕೊಡಗಿನ ಜನರ ಋಣ ತೀರಿಸುತ್ತೇನೆ. ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೇ ಹೊರತು, ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಬಳಿಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾತನಾಡಲು ಆರಂಭಿಸುತ್ತಿದ್ದಂತೆ ಸಭೆಯಿಂದ ಏಕಾಏಕಿ ನಿರ್ಗಮಿಸಿದರು. ಇದರಿಂದ ಸಭೆಯಲ್ಲಿ ಹಾಜರಿದ್ದ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಗೊಂದಲಕ್ಕೀಡಾದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಗದೊಮ್ಮೆ ಪ್ರಧಾನಿ ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕು. ಕೇಂದ್ರ ಸರ್ಕಾರದ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಚಿವರಾದ ಎಸ್.ಎ. ರಾಮದಾಸ್, ಸಿ.ಎಚ್. ವಿಜಯಶಂಕರ್, ಬಿಜೆಪಿ ನಗರಾಧಕ್ಷ ಎಲ್. ನಾಗೇಂದ್ರ, ಜಿಲ್ಲಾಧಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಎಂಎಲ್ಸಿ ತೋಂಟದಾರ್ಯ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗಿದ್ದರು.