ಮೈಸೂರು: ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಮೇ 26ರಿಂದ 28ರವರೆಗೆ ಮಾವು ಮತ್ತು ಹಲಸು ಮೇಳ ಆಯೋಜಿಸಲಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
3 ದಿನಗಳ ಕಾಲ ನಡೆಯಲಿರುವ ಮೇಳದಲ್ಲಿ ವಿವಿಧ ಸ್ವಾದದ ಮಾವು, ಹಲಸು ಮೈಸೂರಿಗರಿಗೆ ಲಭ್ಯವಾಗಲಿದೆ. ಮಾವಿನ ಹಣ್ಣು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಹಲಸಿನ ಘಮಲು ಕೂಡ ಸೂಸತೊಡಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಈ ಹಣ್ಣುಗಳ ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ತೋಟಗಾರಿಕೆ ಇಲಾಖೆ ಅನೇಕ ವರ್ಷಗಳಿಂದ ಮಾವು ಮತ್ತು ಹಲಸು ಮೇಳ ಏರ್ಪಡಿಸುತ್ತಿದೆ.
ಮೇ 26ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಕೆ.ಹರೀಶ್ ಗೌಡ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಮೇಳದಲ್ಲಿ ಸಾರ್ವಜನಿಕರು ಭಾಗಿಯಾಗಬಹುದಾಗಿದೆ.
ಮೇಳ ಆಯೋಜನೆಗೆ ತೋಟಗಾರಿಕೆ ಇಲಾಖೆ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಸಂಬಂಧ ಈಗಾಗಲೇ ಎರಡು ಬಾರಿ ರೈತರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ. ಕುಪ್ಪಣ್ಣ ಪಾರ್ಕ್ ಒಂದು ಭಾಗದಲ್ಲಿ 20ಮಳಿಗೆಗಳನ್ನು ನಿರ್ಮಿಸಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮಾವು ಬೆಳೆಗಾರರು, ವರ್ತಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಗೆ ಮಾವು ಮಾಗಿಸುವ ಸಂಬಂಧ ತರಬೇತಿ ಕಾರ್ಯಕ್ರಮ ನಡೆಸಲಾಗಿದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಅಂತಿಮವಾಗಿ 3 ದಿನಗಳ ಕಾಲ ಮೇಳ ನಡೆಸಲು ನಿರ್ಧರಿಸಲಾಗಿದೆ. ಮಾವು ಪ್ರಿಯರ ಆರೋಗ್ಯದ ಹಿತದೃಷ್ಟಿಯಿಂದ ಕ್ಯಾಲ್ಸಿಯಂ ಕಾರ್ಬೈಡ್ ಮುಕ್ತ ನೈಸರ್ಗಿಕವಾಗಿ ಮಾಗಿಸಿದ ಉತ್ಕೃಷ್ಟ ದರ್ಜೆಯ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯುವಂತೆ ನೋಡಿಕೊಳ್ಳಲು, ಉತ್ತಮ ಬೆಲೆ ನಿಗದಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿವಿಧ ಮಾವು, ಹಲಸಿನ ತಳಿಗಳನ್ನು ಮೇಳದಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ. ಮೇಳದಲ್ಲಿ ಮಾನಕೂರ, ಆಮ್ಲೆಟ್, ಚೈತ್ರಪೈರಿ, ಸೇಲಂ, ಶಿರಸಿ ಲೋಕಲ್, ರತ್ನಗಿರಿ(ಆಲ್ಫನ್ಸ್), ಬಾದಾಮಿ, ರಸಪುರಿ, ಮಲಗೋವ, ಮಲ್ಲಿಕಾ, ಸೇಂದೂರಾ, ತೋತಾಪುರಿ, ಬಾಗನಪಲ್ಲಿ, ದಶೇರಿ, ಕಾಲಾಪ ಹಾಡ್, ಕೇಶರ್, ಸಕ್ಕರೆ ಗುತ್ತಿ, ಅಮ್ರಪಾಲಿ, ದಿಲ್ಪಸಂದ್ ಸೇರಿ ಹಲವು ತಳಿಯ ಹಣ್ಣುಗಳು ಮೇಳದಲ್ಲಿರಲಿವೆ. ಒಂದೊಂದು ಜಾತಿಯ ಮಾವಿಗೂ ಒಂದೊಂದು ಬೆಲೆ ನಿಗದಿ ಮಾಡಲಾಗುತ್ತದೆ. ತೋಟಗಾರಿಕೆ ಇಲಾಖೆಯೂ ಉದ್ಘಾಟನೆ ದಿನವೇ ದರ ನಿಗದಿಪಡಿಸಲಿದೆ.