ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏ.8 ಮತ್ತು 9ರಂದು ಮೈಸೂರು, ಚಾಮರಾಜನಗರ ಪ್ರವಾಸ ಕೈಗೊಂಡಿದ್ದು, ಶನಿವಾರ ಮೈಸೂರಿಗೆ ಆಗಮಿಸಿ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈವರೆಗೆ ಒಟ್ಟು 7 ಬಾರಿ ಮೈಸೂರಿಗೆ ನರೇಂದ್ರ ಮೋದಿ ಅವರು ಆಗಮಿಸಿದ್ದು, 4 ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ಅವರು ಪ್ರಧಾನಿ ಆದ ನಂತರ 4ನೇ ಬಾರಿಗೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಎಸ್ಒಯು ಘಟಿಕೋತ್ಸವ ಭವನವನ್ನು ಎಸ್ಪಿಜಿ ತಂಡ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.
ಶನಿವಾರ ರಾತ್ರಿ 8.40ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಖಾಸಗಿ ಹೋಟೆಲ್ನಲ್ಲಿ ತಂಗಲಿದ್ದಾರೆ. ಬಳಿಕ ಏ.9ರಂದು ಬೆಳಗ್ಗೆ 6.25ಕ್ಕೆ ಮೈಸೂರು ಹೆಲಿಪ್ಯಾಡ್ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ಗೆ ತೆರಳಲಿದ್ದಾರೆ. ಬಳಿಕ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ರಸ್ತೆ ಮೂಲಕ ತೆರಳಿ, ಕಾಡಿನಲ್ಲಿ ಸಫಾರಿ ನಡೆಸಲಿದ್ದಾರೆ. ನಂತರ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.
ಆದಾದ ನಂತರ ತೆಪ್ಪಕಾಡು, ಮಧುಮಲೈ ಕಡೆಗೆ ತೆರಳಿ ಆಸ್ಕರ್ ಪ್ರಶಸ್ತಿ ಮೂಲಕ ವಿಶ್ವದ ಗಮನ ಸೆಳೆದ ಎಲಿಫ್ಯಾಂಟ್ ವಿಷ್ಪರರ್ಸ್ ತಂಡವನ್ನು ಭೇಟಿ ಮಾಡಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ 10.20ಕ್ಕೆ ಮತ್ತೆ ಮೈಸೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ ೧೦.೩೦ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹುಲಿ ವರದಿ ಬಿಡುಗಡೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12.40ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.
ಪ್ರಧಾನಿ ಮೋದಿ ಆಗಮನ ಹಿನ್ನೆಲೆ ನಗರ ಪೊಲೀಸರು ಮತ್ತು ಅಧಿಕಾರಿಗಳು ಮೋದಿ ಸಂಚರಿಸುವ ರಸ್ತೆಯಲ್ಲಿ ಕಾನ್ವೆಯೊಂದಿಗೆ ತಾಲೀಮು ನಡೆಸಿದರು. ವಿಮಾನ ನಿಲ್ದಾಣದಿಂದ ಹೊರಟ ಕಾನ್ವೆ, ಎಂ.ಜಿ. ರಸ್ತೆಯಲ್ಲಿರುವ ಹೋಟೆಲ್ ಬಳಿಗೆ ಸಾಗಿ, ಬಳಿಕ ಕ್ರಾರ್ಡ್ ಭವನದ ಎದುರಿಗಿರುವ ಓವೆಲ್ ಮೈದಾನಕ್ಕೆ ತೆರಳಿತು. ನಂತರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಘಟಿಕೋತ್ಸವ ಭವನಕ್ಕೆ ತೆರಳಿ ತಾಲೀಮು ನಡೆಸಲಾಯಿತು. ಈ ಸಂದರ್ಭ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ಮುತ್ತುರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು. ರಸ್ತೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಜತೆಗೆ ಕ್ರಾಫರ್ಡ್ ಭವನದ ಎದುರಿಗಿರುವ ಓವೆಲ್ ಮೈದಾನದಲ್ಲಿನ ಹೆಲಿಪ್ಯಾಡ್ನಲ್ಲಿ ಸೇನಾ ಹೆಲಿಕಾಪ್ಟರ್ ಇಳಿಸುವ ಮೂಲಕ ತಾಲೀಮು ನಡೆಸಲಾಯಿತು. ಹೆಲಿಪ್ಯಾಡ್ ಆವರಣದಲ್ಲಿ ಬೆಳಕಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಬ್ಯಾರಿಕೆಡ್ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಯನ್ನು ಮಾಡಲಾಗಿದ್ದು, ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಧೂಳು ಮೇಲೆಳದಂತೆ ನೀರು ಸಿಂಪಡಿಸಲಾಗಿದೆ.
ಪ್ರಧಾನಿ ಮೋದಿ ಅವರು ಬಂಡೀಪುರ ಅರಣ್ಯದಲ್ಲಿ ಜೀಪ್ನಲ್ಲಿ ಕುಳಿತು ಸುಮಾರು ಎರಡು ಗಂಟೆ ಕಾಲ ಹುಲಿ ಸಫಾರಿ ನಡೆಸಲಿದ್ದಾರೆ. ಬಂಡೀಪುರ ಉದ್ಯಾನದಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಜತೆ ಅವರು ಮಾತುಕತೆ ನಡೆಸಲಿದ್ದಾರೆ. ಬಳಿಕ ಮೋದಿ ಅವರು ತಮಿಳುನಾಡಿನಲ್ಲಿರುವ ತೆಪ್ಪ ಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿ ಚಿತ್ರ ಎಲಿಫೆಂಟ್ ವಿಸ್ಪರರ್ಸ್ನ ಹೀರೊಗಳಾದ ಬೊಮ್ಮನ್ ಮತ್ತು ಬೆಳ್ಳಿ ಅವರ ಜತೆ ಮೋದಿ ಮಾತನಾಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಏಪ್ರಿಲ್ 6ರಿಂದಲೇ ಸಫಾರಿ ಬಂದ್ ಮಾಡಲಾಗಿದೆ. ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳು ಸಹ ಬಂದ್ ಆಗಿವೆ.