ನಂಜನಗೂಡು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಾಹುಲ್ ಗಾಂಧಿಯವರು ಹಮ್ಮಿಕೊಂಡಿರುವ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಭಾರತ್ ಜೋಡೋ ಪಾದಯಾತ್ರೆಯನ್ನು ಯಶಸ್ವಿಗೊಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತಾಲೂಕಿನ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಅ.2ರಂದು ರಾಹುಲ್ ಗಾಂಧಿ ಅವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸ್ಥಳಪರಿಶೀಲನೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಪರಿಶೀಲನೆ ನಡೆಸಿ, ಅಂದು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಂತೆ ಸೂಚನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ.2ರಂದು ಬೆಳಿಗ್ಗೆ 10ಗಂಟೆಗೆ ರಾಹುಲ್ ಗಾಂಧಿ ಅವರು, ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ ಎಂದರು.
ರಾಜಕೀಯವಾಗಿ ಮಾತನಾಡಿದ ಅವರು ಭಾರತೀಯ ಜನತಾ ಪಾರ್ಟಿಯವರು ಜನರ ಮನಸ್ಸು ಒಡೆಯುವುದು ಮತ್ತು ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನ ಆತಂಕದಿಂದ ಬದುಕುವ ಸ್ಥಿತಿ ಉಂಟಾಗಿದೆ. ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ, ಕಮಿಷನ್ ಪಡೆಯುತ್ತಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾಧ್ಯಕ್ಷ ವಿಜಯಕುಮಾರ್ ಜಿಪಂ ಮಾಜಿ ಅಧ್ಯಕ್ಷ ಬಸವರಾಜು, ಬ್ಲಾಕ್ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಅಧ್ಯಕ್ಷ ಶಂಕರ್, ಲತಾ ಸಿದ್ದಶೆಟ್ಟಿ. ಮೂಗ ಶೆಟ್ಟಿ. ನಂದಕುಮಾರ್ ಮೊದಲಾದವರಿದ್ದರು.