ಮೈಸೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ಸಿಂಹ ಅವರಿಗೆ ಟಿಕೆಟ್ ಕೈತಪ್ಪುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಸಂಸದರ ಪರ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್ ಆರಂಭವಾಗಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿರುವುದಲ್ಲದೆ ನೋಟಾದ ಎಚ್ಚರಿಕೆಯನ್ನು ನೀಡಲಾಗುತ್ತಿದೆ.
ಸಂಸದ ಪ್ರತಾಪ್ ಸಿಂಹ ಅವರಿಗೆ ಕ್ಷೇತ್ರದಲ್ಲಿ ತಮ್ಮದೇ ಅಭಿಮಾನಿ ಬಳಗವಿದೆ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಸಿಗುವುದು ಅನುಮಾನ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರವಷ್ಟೇ ಅಲ್ಲದೇ ರಾಜ್ಯಾದ್ಯಂತ ಅವರ ಅಭಿಮಾನಿಗಳು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಪರ ನಿಂತಿದ್ದಾರೆ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ವಿಶೇಷ ಎಂದರೆ, ಪ್ರತಾಪ್ ಸಿಂಹ ಅವರನ್ನು ಸೈದ್ದಾಂತಿಕವಾಗಿ ವಿರೋಧಿಸಿದವರೂ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ 2014, 2019ರ ಚುನಾವಣೆಯಲ್ಲಿ ಸುಲಭವಾಗಿ ಜಯ ಕಂಡಿರುವ ಪ್ರತಾಪ್ ಸಿಂಹ, ಮತ್ತೊಂದು ಚುನಾವಣಾ ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಿಪೋರ್ಟ್ ಕಾರ್ಡ್ ಹೆಸರಿನಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ, ಇವರಿಗೆ ಟಿಕೆಟ್ ನಿರಾಕರಿಸಲಾಗುತ್ತಿದೆ ಎಂಬ ಮಾತು ದಟ್ಟವಾಗಿ ಹರಿದಾಡುತ್ತಿದೆ. ಅದಕ್ಕಾಗಿ ಪ್ರತಾಪ್ಸಿಂಹ ಬದಲು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಪ್ರಯತ್ನಗಳು ಜೋರಾಗಿದೆ. ಈ ಬೆಳವಣಿಗೆಯಿಂದ ಸಿಂಹ ಹಾಗೂ ಅವರ ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಹಾಗಾಗಿ, ಅವರ ಪರ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಜೋರಾಗಿದೆ.
ಒಕ್ಕಲಿಗ ಸಂಘಟನೆಗಳ ಒಕ್ಕೂಟ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದು, ಟಿಕೆಟ್ ಬದಲಾಯಿಸಿದರೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿಯೂ ಎಚ್ಚರಿಕೆ ನೀಡಿದೆ. ಇನ್ನು ಮೈಸೂರು ಕೊಡವ ಸಮಾಜದ ಮುಖಂಡರು ಕೂಡ ಸುದ್ದಿಗೋಷ್ಠಿ ನಡೆಸುವ ಮೂಲಕ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಇನ್ನು ಮೈಸೂರು ಭಾಗದ ಪ್ರಬಲ ಜೆಡಿಎಸ್ ನಾಯಕರಾಗಿರುವ ಜಿ.ಟಿ.ದೇವೇಗೌಡ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ಏಕೈಕ ಶಾಸಕ ಟಿ.ಎಸ್.ಶ್ರೀವತ್ಸ ಕೂಡ ಪ್ರತಾಪ್ ಸಿಂಹ ಪರ ಬ್ಯಾಟ್ ಬೀಸಿದ್ದಾರೆ.
ಫೇಸ್ಬುಕ್ ಖಾತೆಗಳಲ್ಲಿ ಟಿಕೆಟ್ ಕೊಡದಿದ್ದರೆ ಹೋರಾಟದ ಎಚ್ಚರಿಕೆ ನೀಡಿರುವ ಅಭಿಮಾನಿಗಳು, ಪ್ರತಾಪ್ ಸಿಂಹರಿಗೆ ಟಿಕೆಟ್ ಕೊಡದಿದ್ದರೆ ನೋಟಾ ಚಲಾಯಿಸುವುದಾಗಿಯೂ ಪೋಸ್ಟ್ ಹರಿಬಿಟ್ಟಿದ್ದಾರೆ. ಇನ್ನೂ ಕೆಲವರಿಂದ ಮತ್ತೊಮ್ಮೆ ಪ್ರತಾಪ್ ಸಿಂಹ ಎಂಬ ಪೋಸ್ಟ್ ಹರಿದಾಡಿದರೆ, ಇನ್ನೊಂದಷ್ಟು ಮಂದಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ನಡೆಯುತ್ತಿದೆ ಎಂದು ಆರೋಪಿಸಿ ಈ ಬಗ್ಗೆಯೂ ಆಕ್ರೋಶದ ಪೋಸ್ಟ್ ಹಾಕಿದ್ದಾರೆ. ಜತೆಗೆ ಭಾರತಕ್ಕಾಗಿ ಮತ್ತೊಮ್ಮೆ ಮೋದಿ, ಮೈಸೂರಿಗಾಗಿ ಮತ್ತೊಮ್ಮೆ ಪ್ರತಾಪ್ ಸಿಂಹ, ಐ ಸ್ಟ್ಯಾಂಡ್ ವಿತ್ ಪ್ರತಾಪ್ ಸಿಂಹ ಎಂಬ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಇದರ ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಸಹಿ ಸಂಗ್ರಹ ಅಭಿಯಾನವೂ ನಡೆಯುತ್ತಿದ್ದು, ನಮ್ಮ ಬೆಂಬಲ ಪ್ರತಾಪ್ಗೆ ಎಂಬ ಪೋಸ್ಟ್ ವೈರಲ್ ಆಗುತ್ತಿದೆ.