ನಂಜನಗೂಡು: ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಶಾಸಕ ಎಸ್. ರಾಮದಾಸ್ ಹೇಳಿದರು.
ನಂಜನಗೂಡು ತಾಲೂಕಿನ ಎಲಚಗೆರೆ ಗೇಟ್ ಬಳಿ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಚುನಾವಣಾ ಪ್ರಚಾರ ನಡೆಸಲು ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ನಂಜನಗೂಡಿಗೆ ಸಂಜೆ 4:25ಕ್ಕೆ ಹೆಲಿಪ್ಯಾಡ್ ಮೂಲಕ ಆಗಮಿಸುತ್ತಾರೆ. 4:35ಕ್ಕೆ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮ ಮುಗಿದ ಬಳಿಕ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಸುಮಾರು ಅರ್ಧ ಗಂಟೆಗಳ ಕಾಲ ದರ್ಶನ ಪಡೆಯಲಿದ್ದಾರೆ. ತೆರಳುವ ರಸ್ತೆ ಮಾರ್ಗದಲ್ಲಿ ಕಾಶಿಯಿಂದ ದಕ್ಷಿಣ ಕಾಶಿಯವರಿಗೆ ಎಂಬ ವಿಷಯವನ್ನು ಇಟ್ಟುಕೊಂಡು ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಪ್ರದರ್ಶನ ಮಾಡಲಿದ್ದೇವೆ ಎಂದು ಹೇಳಿದರು. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, 3 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ರ್ಯಾಲಿ ಮಾಡಲಿದ್ದಾರೆ.
ಆಗಮಿಸುವ ಜನರಿಗೆ 14 ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, 9 ವರ್ಷಗಳ ನರೇಂದ್ರ ಮೋದಿಯವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಚಿತ್ರಿಕರಣ ಮಾಡಿ ಪ್ರದರ್ಶನ ಮಾಡಲಾಗುವುದು.
ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೆಹಂದಿ ಹಾಕುವ ಮೂಲಕ ಹಾಗೂ ಜಾನಪದ ಸೋಗಡಿನ ನೃತ್ಯ, ಹಾಗೂ 500ಕ್ಕೂ ಹೆಚ್ಚು ಕಲಾವಿದರು ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ಅವರಿಗೆ ಅದ್ದೂರಿಯಾಗಿ ಸ್ವಾಗತವನ್ನು ಕೋರಲಿದ್ದೇವೆ.
ಮೈಸೂರು ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳ 18 ಅಭ್ಯರ್ಥಿಗಳು ಆಗಮಿಸುತ್ತಾರೆ ಎಂದು ತಿಳಿಸಿದರು . ಗೋಷ್ಠಿಯಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿಯ ವಿವೇಕ್ ಠಾಕೋರ್, ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಪ್ರದೀಪ್, ತಾಲ್ಲೂಕು ಅಧ್ಯಕ್ಷ ಮಹೇಶ್, ಭಾಗವಹಿಸಿದ್ದರು.