ಮೈಸೂರು: ಮತ ಕೇಳಲು ಬಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಲ್ಲದೆ, ಮತ ಕೇಳಲು ಬಂದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾವು ಸಂಕಷ್ಟ ಅನುಭವಿಸುತ್ತಿದ್ದು, ಕಳೆದ ಹಲವು ಸಮಯಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾರು ನಮ್ಮ ಸಮಸ್ಯೆ ಬಗ್ಗೆ ಮಾತನಾಡಿಲ್ಲ. ನಮ್ಮ ಬಳಿಗೂ ಬಂದಿಲ್ಲ. ಈಗ ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ. ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಪ್ರತಿಭಟನಾಕಾರರನ್ನು ಸಮಾಧಾನಿಸುವ ಸಲುವಾಗಿ ಈ ವಿಚಾರವನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಹೇಳಿದರು ಈ ವೇಳೆ ಕೋಪಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಇನ್ನು ಇಲ್ಲಿದ್ದರೆ ಯಾವುದೇ ಪ್ರಯೋಜನವಿಲ್ಲ ಎಂದರಿತ ಯತೀಂದ್ರ ಸಿದ್ದರಾಮಯ್ಯ ಅವರು ಅಲ್ಲಿಂದ ತೆರಳಿದ್ದಾರೆ.