ನಂಜನಗೂಡು: ಓಂಕಾರ್ ಅರಣ್ಯ ಪ್ರದೇಶದ ಕಾಡಿನಿಂದ ಆಹಾರ ಹುಡುಕುತ್ತಾ ನಾಡಿಗೆ ಬಂದ 4 ಕಾಡಾನೆಗಳು ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಮತ್ತು ಸೂರಹಳ್ಳಿ ಗ್ರಾಮಗಳ ಸುತ್ತಮುತ್ತ ಕಾಣಿಸಿಕೊಂಡು ಈ ಭಾಗದ ಜನರನ್ನು ಭಯಭೀತರಾಗುವಂತೆ ಮಾಡಿವೆ.
ಓಂಕಾರ್ ಅರಣ್ಯ ಪ್ರದೇಶದಿಂದ ಬಂದಿರುವ ಈ ಕಾಡಾನೆಗಳು ಗುರುವಾರ ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಕಸುವಿನಹಳ್ಳಿ ಗ್ರಾಮದ ರೈತರ ಜಮೀನಿಗೆ ಲಗ್ಗೆ ಇಟ್ಟಿವೆ. ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಕಾಡಾನೆಗಳನ್ನು ಕಂಡ ರೈತರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು , ಅಪಾಯದ ಮುನ್ಸೂಚನೆ ಅರಿತು ಜನರನ್ನು ನಿಯಂತ್ರಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ಕಾಡಾನೆಗಳು ಬಾಳೆ ತೋಟ, ಮುಳ್ಳು ತಂತಿ ಕಂಬಗಳನ್ನು ಮುರಿದು ನಾಶಪಡಿಸಿವೆ. ಕಾಡಾನೆಗಳು ಪ್ರತ್ಯಕ್ಷವಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಯಲ್ಲಿದ್ದು, ಸಂಜೆ ವೇಳೆಗೆ ಕಾಡಾನೆಗಳನ್ನು ಕಾಡಿಗೆ ಸುರಕ್ಷಿತವಾಗಿ ಕಳುಹಿಸಲು ಎಲ್ಲಾ ರೀತಿಯ ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದೇವೆ ಎಂದು ವಲಯ ಅರಣ್ಯ ಅಧಿಕಾರಿ ನಿತೀನ್ ಕುಮಾರ್ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.