ನಂಜನಗೂಡು: ಕುಡಿಯುವ ನೀರಿಗಾಗಿ ಮಹಿಳೆಯರು ಅಕ್ಷರಶಃ ಸಿಡಿದೆದ್ದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿರುವ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿಂದ ಬಿಳಿಗೆರೆ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ನಾವು ಪರದಾಡುತ್ತಿದ್ದೇವೆ. ಒಂದು ಬಿಂದಿಗೆ ನೀರು ಸಿಕ್ಕುವುದೇ ಕಷ್ಟಕರವಾಗಿದೆ. ಈಗಾಗಲೇ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನಲ್ಲಿಗಳನ್ನು ಅಳವಡಿಸಲು ರಸ್ತೆಗಳನ್ನು ಗುಂಡಿ ತೋಡಿ ಹಾಗೆಯೇ ಬಿಟ್ಟಿದ್ದಾರೆ. ಇದರಿಂದ ಮಹಿಳೆಯರು ವೃದ್ಧರು ಸಾರ್ವಜನಿಕರು ಬಿದ್ದು ಗಾಯಗೊಂಡಿರುವ ಸಾಕಷ್ಟು ಉದಾಹರಣೆಗಳಿವೆ.
ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಹಿಳೆಯರು ಆರೋಪಿಸಿದ್ದರು. ಕೂಡಲೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಹಾಗೂ ರಸ್ತೆಗಳನ್ನು ಹಗೆದು ಹಾಗೆ ಬಿಟ್ಟಿರುವುದನ್ನು ಮುಚ್ಚಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಗುವುದು. ಸಮಸ್ಯೆ ಬಗೆಹರಿಸದಿದ್ದಲ್ಲಿ ಗ್ರಾಮ ಪಂಚಾಯಿತಿ ಮುಂದೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.