ನಂಜನಗೂಡು: ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ಕಲ್ಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಶಾಸಕ ದರ್ಶನ್ ಧ್ರುವ ನಾರಾಯಣ್ ತಿಳಿಸಿದರು.

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಶಾದಿ ಮಹಲ್ ನಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ಅದಾಲತ್, ಪಿಂಚಣಿ ಅದಾಲತ್, ಇ- ಪೌತಿ ಖಾತೆ ಅದಾಲತ್ ಹಾಗೂ ಜನಸಂಪರ್ಕ ಸಭೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿ ಮಾತನಾಡಿದರು.

ದೊಡ್ಡಕವಲಂದೆ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳು ಇರುವ ಬಗ್ಗೆ ದೂರುಗಳು ಬಂದಿದ್ದವು. ಆದಕಾರಣ ಇಲ್ಲಿಂದಲೇ ಮೊಟ್ಟ ಮೊದಲನೇ ಬಾರಿಗೆ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದೇವೆ. ಇಂದು ಸಾಕಷ್ಟು ಜನ ಇಲ್ಲಿಗೆ ಬಂದು ನಿಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ನೀಡಿ ವಾಪಸ್ ಸ್ವೀಕೃತಿ ಪತ್ರವನ್ನು ಪಡೆಯುವುದರ ಜೊತೆಗೆ ಸಂಬಂಧಪಟ್ಟ ಅಧಿಕಾರಿಯ ಫೋನ್ ಸಂಖ್ಯೆಯನ್ನು ಪಡೆದುಕೊಂಡು ಹೋಗಬೇಕು.

ಒಂದು ವೇಳೆ ವಿಳಂಬವಾದರೆ ಪ್ರತಿ ಸೋಮವಾರ ನಂಜನಗೂಡು ಹಾಗೂ ಎರಡನೇ ಸೋಮವಾರ ಹುಲ್ಲಹಳ್ಳಿ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಾಗುತ್ತದೆ. ಇಲ್ಲಿಗೆ ಬಂದು ನೇರವಾಗಿ ನನ್ನನು ಭೇಟಿಯಾಗಿ ನನ್ನ ಗಮನಕ್ಕೆ ತರಬಹುದು. ಈಗಾಗಲೇ ಅಧಿಕಾರಿಗಳಿಗೂ ಸಹ ರೈತರ ಸಮಸ್ಯೆಗಳನ್ನು ವಿಳಂಬ ಮಾಡದೆ ವೇಗವಾಗಿ ಕೆಲಸ ಮಾಡಿಕೊಡಿ ಎಂದು ಸೂಚಿಸಲಾಗಿದೆ. ರೈತರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ನಂತರ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮೈತ್ರಿ ಹಾಗೂ ಮನಸ್ವಿನಿ ಪಿಂಚಣಿಗಳ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಪತ್ರವನ್ನು ವಿತರಿಸಿದರು.

ರಸ್ತೆ ಒತ್ತುವರಿ ಸೇರಿದಂತೆ ಸರ್ವೆ ಇಲಾಖೆಗೆ 14 ಅರ್ಜಿಗಳು, ಆರ್.ಟಿ‌‌.ಸಿ ತಿದ್ದುಪಡಿಗೆ ಸಂಬಂಧಪಟ್ಟಂತೆ 59 ಅರ್ಜಿಗಳು, ಪೌತಿ ಖಾತೆಗೆ 127 ಅರ್ಜಿಗಳು ಸಲ್ಲಿಕೆ, ಪಿಂಚಣಿ 46, ಇತರೆ 20 ಅರ್ಜಿಗಳು ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಸ್ವೀಕೃತವಾಗಿವೆ. ಇನ್ನು ಒಂದು ತಿಂಗಳ ಒಳಗಾಗಿ ರೈತರು ನೀಡಿರುವ ಅರ್ಜಿಗಳನ್ನು ಪರಿಶೀಲಿಸಿ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುತ್ತದೆ ಎಂದು ರಾಜಸ್ವ ನಿರೀಕ್ಷಕರಾದ ಹೆನ್ರಿ ಡಿಸೋಜಾ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗ್ರೇಡ್ 2 ರಾಜಕಾಂತ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಗ್ರಾ.ಪಂ ಅಧ್ಯಕ್ಷೆ ಪರ್ಹೀನ್ ಬೇಗಂ, ಗ್ರಾ.ಪಂ ಉಪಾಧ್ಯಕ್ಷ ಸಿ.ಮಂಜುನಾಥ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.