ಪಿರಿಯಾಪಟ್ಟಣ: ರೈತರು ಜಾನುವಾರು ಪ್ರಾಣಿ ಪಕ್ಷಿಗಳ ಬಳಕೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ನಮ್ಮ ಊರು ನಮ್ಮ ಕೆರೆ ಎಂಬ ವಿಶೇಷ ಕಾರ್ಯಕ್ರಮದಡಿ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಂಸ್ಥೆಯ ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ತಿಳಿಸಿದ್ದಾರೆ.
ತಾಲೂಕಿನ ಬೆಟ್ಟದಪುರ ಸಮೀಪದ ಕೊಣಸೂರು ಗ್ರಾಮದ ಚೆಲುವಯ್ಯನಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮ ಅವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಕೆರೆಗಳ ಪುನಶ್ಚೇತನಕ್ಕೆ ಮುಂದಾಗಿದ್ದು ಕೊಣಸೂರು ಗ್ರಾಮದ ಕೆರೆ 571ನೇ ಯಾಗಿದೆ, ಕೆರೆ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಮುಂದಿನ ಪಿಳಿಗೆಗೂ ನೀರಿನ ಸಮಸ್ಯೆಯಿರುವುದಿಲ್ಲ ರೈತರು ಹಾಗೂ ಸಾರ್ವಜನಿಕರು ಕೆರೆಕಟ್ಟೆಗಳನ್ನು ಸಂರಕ್ಷಿಸುವ ಮಹತ್ವ ಕಾರ್ಯಕ್ರಮದಲ್ಲಿ ಸಹಕಾರ ನೀಡಬೇಕು ಎಂದರು.
ಈ ಸಂದರ್ಭ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗೇಶ್, ರೈತ ಸಂಘದ ತಾಲೂಕು ಅಧ್ಯಕ್ಷ ಆನಂದ್, ಗ್ರಾ.ಪಂ ಸದಸ್ಯರಾದ ಸದಾಶಿವ ಮುಖಂಡರಾದ ಪ್ರಭು, ಮಂಜುನಾಥ, ರವಿ, ರಾಜಶೇಖರಯ್ಯ, ಸತೀಶ್, ರುದ್ರಾಣಿ, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು, ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಕೃಷಿ ಮೇಲ್ವಿಚಾರಕರು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.