ಪಿರಿಯಾಪಟ್ಟಣ: ದಾವಣಗೆರೆಯಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಮುಗಿಸಿ ಹಿಂದಿರುಗುವಾಗ ಅಪಘಾತದಲ್ಲಿ ಮೃತಪಟ್ಟಿದ್ದ ತಾಲೂಕಿನ ಹಲಗನಹಳ್ಳಿ ಗ್ರಾಮದ ನಿವಾಸಿ ಫಸೀವುದ್ದೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಾಂತ್ವನ ಹೇಳಿ ಎರಡು ಲಕ್ಷ ರೂ ಪರಿಹಾರ ವಿತರಿಸಿದರು.
ಬಳಿಕ ಕುಟುಂಬದವರೊಂದಿಗೆ ಸಿದ್ಧರಾಮಯ್ಯ ಅವರು ಮಾತನಾಡಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವುದರ ಜತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಮೃತ ಫಸೀವುದ್ದೀನ್ ಸಹೋದರ ಸಲ್ಲಾವುದ್ದೀನ್ ಅವರ ಚಿಕಿತ್ಸೆಗೆ ಸಹಕರಿಸುವ ಭರವಸೆ ನೀಡಿದರು. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡಿದ್ದವರ ನಿವಾಸಗಳಿಗೆ ಸಹ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತನಾಡಿದರು.
ಹಲಗನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯೆ ಬೆಟ್ಟದಪುರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರಿಗೆ ಮೈಸೂರು ಪೇಟ ತೊಡಿಸಿ ಬೃಹದಾಕಾರದ ಗುಲಾಬಿ ಹಾರ ಹಾಕಿ ಸ್ವಾಗತಿಸಿದರು. ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿದ್ದರಾಮಯ್ಯ ಪರ ಜೈಕಾರ ಕೂಗಿ ಸಂಭ್ರಮಿಸಿದರು.
ಸಿದ್ದರಾಮಯ್ಯ ಅವರು ಹಲಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದ ವಿಷಯ ತಿಳಿದು ತಾಲ್ಲೂಕಿನ ವಿವಿಧೆಡೆಯಿಂದ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಲಗನಹಳ್ಳಿ ಗ್ರಾಮಕ್ಕೆ ಆಗಮಿಸಿ ತಮ್ಮ ನೆಚ್ಚಿನ ನಾಯಕನನ್ನು ನೋಡಲು ಕಾತುರದಿಂದ ಕಾಯುತ್ತಿದ್ದರು, ಈ ವೇಳೆ ಸಿದ್ದರಾಮಯ್ಯ ಅವರು ಅಭಿಮಾನಿಗಳತ್ತ ಕೈಬೀಸಿ ನಮಿಸಿದರು, ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದ ದೃಶ್ಯ ಕಂಡುಬಂದಿತು, ಪೋಲಿಸರು ಜನದಟ್ಟಣೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರು, ಈ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್, ಕೆಪಿಸಿಸಿ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಹಮತ್ ಜಾನ್ ಬಾಬು, ಡಿ.ಟಿ ಸ್ವಾಮಿ, ಗ್ರಾ.ಪಂ ಸದಸ್ಯ ಸುಹೇಲ್ ಪಾಷಾ, ತಾ.ಪಂ ಮಾಜಿ ಸದಸ್ಯ ಕುಂಜಪ್ಪ ಕಾರ್ನಾಡ್, ಮುಖಂಡರಾದ ನಿತಿನ್ ವೆಂಕಟೇಶ್, ಹೆಚ್.ಡಿ ಗಣೇಶ್, ರಘುಗೌಡ, ಆಯಬ್ ಖಾನ್, ಜಾಮಿಯಾ ಮಸೀದಿ ಅಧ್ಯಕ್ಷ ನಫೀಸ್ ಖಾನ್, ಕಾರ್ಯದರ್ಶಿ ಸೈಯದ್ ಸುಹೇಲ್, ನೂರುಲ್ ಹುದಾ ಮಸೀದಿ ಅಧ್ಯಕ್ಷ ಸೈಯದ್ ಹಸೀಬ್, ಕಾರ್ಯದರ್ಶಿ ಶಫಿಉಲ್ಲಾ, ಪುಟ್ಟರಾಜು, ಅಸ್ವಾಳ್ ಶಫಿ, ಶಂಕರೇಗೌಡ, ಅನ್ಸರ್ ಪಾಷ, ಭೀಮಣ್ಣ, ರವಿಕುಮಾರ್, ಜೆ.ಮೋಹನ್, ಚೌತಿ ಮಲ್ಲಣ್ಣ, ಮುರುಳಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಮುಖಂಡರು ಮತ್ತು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರು ಇದ್ದರು.