ಮೈಸೂರು: ರಾಜ್ಯದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಜೋರಾಗಿದೆ. ರಾಜ್ಯ ಸರ್ಕಾರ ಕೃಷಿ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ವಿದ್ಯುತ್ ಪೂರೈಸಲು ವಿಫಲವಾಗಿದೆ ಎಂದು ಪ್ರತಿಪಕ್ಷಗಳು ರೋಪಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.
ರಾಜ್ಯದಲ್ಲಿ 2 ರಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಹೆಚ್ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೊರಗಡೆಯಿಂದ ವಿದ್ಯುತ್ ಖರೀದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರೀ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಆದರೆ ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದರು.
ಬೋರ್ ವೆಲ್ ಕೊರೆಸಲು ಸೂಚನೆ: ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. 42,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೇ ಹೊಸದಾಗಿ ಬೋರ್ವೆಲ್ ಕೊರೆಸಲು ಸೂಚಿಸಲಾಗಿದೆ ಎಂದರು.