ಮೈಸೂರು: ಸಿದ್ದರಾಮಯ್ಯ 50:50 ಸಿಎಂ ಆಗಿದ್ದು, ಕೇವಲ ಮುಡಾದಲ್ಲಿ ಅಕ್ರಮವಾಗಿ 50:50 ಸೈಟ್ ಪಡೆಯದೆ ವಿರೋಧ ಪಕ್ಷಗಳೊಂದಿಗೆ 50:50 ಹೊಂದಾಣಿಕೆ ರಾಜಕೀಯವನ್ನೂ ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಡಾದ 50;50 ನಿವೇಶನ ಹಂಚಿಕೆಯಲ್ಲಿನ ಬಹುಕೋಟಿ ಹಗರಣ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿ ಸೈಟ್ಗಳಾಗಿ ಮಾರಾಟವಾಗಿರುವ ಜಮೀನನ್ನು ಬೇನಾಮಿ ಮೂಲಕ ಕೊಂಡು, ದಾನಪತ್ರದ ಮೂಲಕ ಪತ್ನಿಯ ಹೆಸರಿಗೆ ವರ್ಗಾಯಿಸಿಕೊಂಡು, ಈಗ ಬಿಜೆಪಿಯವರು ಕೊಟ್ಟಿದ್ದಾರೆ, ನಾನು ತೆಗೆದುಕೊಂಡಿದ್ದೇನೆ ಎಂದು ನಿರ್ಲಜ್ಜೆಯಿಂದ ಮಾತನಾಡುತ್ತಿದ್ದಾರೆ.
ಈ ಹಿಂದೆ ಅರ್ಕಾವತಿ ರೀಡೂ ಪ್ರಕರಣದಿಂದ ಪಾರಾಗಲು ಲೋಕಾಯುಕ್ತವನ್ನು ಮುಚ್ಚಿದ ಅಪಖ್ಯಾತಿ ಹೊಂದಿದ್ದಾರೆ. ಇವರನ್ನು ಮುಖ್ಯಮಂತ್ರಿಯಾಗಿ ಮಾಡಿ ಮತ್ತಷ್ಟು ಅಕ್ರಮಗಳನ್ನು ಮಾಡಲು ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.
ಮೆರವಣಿಗೆ ಮೂಲಕ ಸಾಗಿ ಮುಡಾಗೆ ಮುತ್ತಿಗೆ ಹಾಕಲು ಗನ್ ಹೌಸ್ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ, ಮುಡಾದ 50;50 ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಲಿ ಇತ್ಯಾದಿ ಬರಹವುಳ್ಳ ಫಲಕ ಪ್ರದರ್ಶಿಸಿದರು. ಘೋಷಣೆ ಕೂಗುತ್ತಾ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಪಾದಯಾತ್ರೆಯ ಮೂಲಕ ಧಾವಿಸಿದರು. ಪೊಲೀಸರು ಅವರನ್ನು ತಡೆದು ಬಂಧಿಸಿದರು.
ಇನ್ನೊಂದೆಡೆ ಬೇರೆ ಬೇರೆ ಕಡೆಯಿಂದ ಬಂದ ಪ್ರತಿಭಟನಾಕಾರರು ರೈಲ್ವೇ ನಿಲ್ದಾಣದ ಬಳಿ ಒಟ್ಟು ಸೇರಿ ಮುಡಾ ಕಚೇರಿ ಕಡೆಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗುತ್ತಾ ಧಾವಿಸಿದರು. ರೋಟರಿ ಶಾಲೆಯ ಬಳಿಯ ವೃತ್ತದಲ್ಲಿ ಅವರನ್ನು ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾಕಾರರು ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದಾಗ ಅವರನ್ನೂ ಬಂಧಿಸಿ, ಕರೆದೊಯ್ದರು.

