ಮೈಸೂರು: ಸಚಿವ ವಿ.ಸೋಮಣ್ಣ ಶುಕ್ರವಾರ ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ನಾಗೇಶ್ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ವರುಣ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ತೆರಳಿದ್ದ ವೇಳೆ ತಾಲೂಕಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಹಲ್ಲೆಗೊಳಗಾಗಿ ಜೆಡಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ಮುಖಂಡರಾದ ಪುಟ್ಟಬುದ್ದಿ, ಶರತ್ ಪುಟ್ಟಬುದ್ದಿ, ಅಪ್ಪಣ್ಣ ಸೇರಿದಂತೆ ಇತರರಿದ್ದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ಕ್ಷೇತ್ರದ ಪ್ರಚಾರಕ್ಕೆ ತೆರಳಿದ್ದ ವೇಳೆ ಗುರುವಾರ ಸಂಜೆ ಪ್ರಕರಣ ನಡೆದಿದೆ. ದ್ವೇಷದ ರಾಜಕಾರಣ ಸಿದ್ದರಾಮಯ್ಯರಿಗೆ ಶೋಭೆ ತರಲ್ಲ. ಸಿದ್ದರಾಮಯ್ಯ ಮತ್ತು ಬೆಂಬಲಿಗರು ಹತಾಶೆಗೊಂಡಿದ್ದಾರೆ. ಅವರಿಗೆ ಸೋಲಿನ ಭಯ ಶುರುವಾಗಿದೆ. ವರುಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭಯ ಪಡಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.