ನಂಜನಗೂಡು: ರಾಂಪುರ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಾಲಾಕಿ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದ ಗಣೇಶ ನಾಯಕ ಎಂಬುವವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.
ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು, ಕೆಲವು ದಿನಗಳಿಂದ ಸಾಕುಪ್ರಾಣಿಗಳ ಮೇಲೆ ನಿರಂತರವಾಗಿ ಚಿರತೆ ದಾಳಿ ನಡೆಸಿ ಬಲಿಪಡೆಯುತ್ತಿತ್ತು. ಇದರಿಂದ ಗ್ರಾಮಸ್ಥರು ಮತ್ತು ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯಭೀತಿಯಲ್ಲಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ನಂಜನಗೂಡು ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ಅವರು, ವಿಶೇಷ ತಂಡವನ್ನು ರಚನೆ ಮಾಡಿ, ಚಿರತೆಯ ಚಲನವಲನ ಗಮನಿಸಲು ಸಿಬ್ಬಂದಿಗಳನ್ನು ನಿಯೋಜನೆ ಮಾಡಿದ್ದರು. ಹಾಗೆಯೇ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಅಳವಡಿಸಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಕೊನೆಗೂ ಚಾಲಾಕಿ ಚಿರತೆ ಬೋನಿಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಚಿರತೆಯನ್ನು ವಶಕ್ಕೆ ಪಡೆದು ಕಾಡಿಗೆ ಬಿಟ್ಟಿದ್ದಾರೆ. ಚಿರತೆಯ ಕಾಟಕ್ಕೆ ಕೊನೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.