ನಂಜನಗೂಡು: ಇಬ್ಬರು ವ್ಯಕ್ತಿಗಳ ಮೇಲೆ ಹುಲಿ ದಾಳಿ ನಡೆಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ನಾಗಣಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 45 ವರ್ಷದ ಸುರೇಶ್, 40 ವರ್ಷದ ನಂಜುಂಡಸ್ವಾಮಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಗೇಂದ್ರ ಎಂಬುವರಿಗೆ ಸೇರಿದ ಜಮೀನಿನಲ್ಲಿ ಅವಿತು ಕುಳಿತಿದ್ದ ವ್ಯಾಘ್ರ ಮನೆಗೆ ತಿರುಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಗಾಯಗೊಳಿಸಿದೆ. ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಸದ್ಯ ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಹೆಡಿಯಾಲ ಹಾಗೂ ಓಂಕಾರ್ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಕಾರ್ಯಚರಣೆಯನ್ನು ನಡೆಸಿ ಕೆಲವೇ ಗಂಟೆಗಳಲ್ಲಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಎರಡು ವರ್ಷದ ಹೆಣ್ಣು ಹುಲಿಯಾಗಿದ್ದು, ಬಲೆ ಬೀಸಿ ಹುಲಿಯನ್ನು ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳು ಬೋನಿಗೆ ಬಿಟ್ಟಿದ್ದಾರೆ. ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.