ನಂಜನಗೂಡು: ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ.
ಇಂದು ಗುರುವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಸೇರಿದಂತೆ ಇತರರು ಬಣ್ಣದ ಬಣ್ಣದ ರಂಗೋಲಿ ಬಿಡಿಸಿ, ಮತದಾನದ ಜಾಗೃತಿ ಘೋಷವಾಕ್ಯಗಳನ್ನು ಬರೆದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು.
ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಉಧ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಮತವು ಅತ್ಯಮೂಲ್ಯವಾಗಿದ್ದು, ಯಾರೊಬ್ಬರು ಮತದಾನದಿಂದ ಹೊರಗುಳಿಯದೆ ತಮ್ಮ ಸಂವಿಧಾನದ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು. ಹಾಗೂ ಚುನಾವಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಸಿವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸುವಂತೆ ತಿಳಿಸಿದರು.
ಬಳಿಕ ಅತ್ಯುತ್ತಮವಾಗಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮ ಬಳಿಕ ಮತದಾನ ಪ್ರಚಾರ ವಾಹನದೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ದಿವ್ಯ, ಸಂಜೀವಿನಿ ಸಮೂಹ ಮೇಲ್ವಿಚಾಲಕರಾದ ಹರೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.