ಮೈಸೂರು: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆ ಎಂದರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿ, ‘ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. ಬಿಜೆಪಿ, ಆರ್ಎಸ್ಎಸ್ ಕಡೆ ಯಾರೂ ತಲೆ ಹಾಕಬಾರದು’ ಎಂದು ಕಾರ್ಯಕರ್ತರಿಗೆ ಹೇಳಿದರು.
ಶೂದ್ರರು, ದಲಿತರು ಹಾಗೂ ಮಹಿಳೆಯರಿಗೆ ಆರ್ಎಸ್ಎಸ್ ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡುವುದಿಲ್ಲ ಎಂದು ಟೀಕಿಸಿದರು.‘ಆರ್ಎಸ್ಎಸ್, ಬಿಜೆಪಿ ಜೊತೆ ಜೆಡಿಎಸ್ ಸೇರಿಕೊಂಡಿದೆಯಲ್ಲಾ, ಇದನ್ನು ಟೀಕಿಸಬಾರದಾ? ದಲಿತರಿಗೆ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಹಣ ಮೀಸಲಿಡುವ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಅಭಿವೃದ್ಧಿ ಹಣದಲ್ಲಿ ಶೇ24.1ರಷ್ಟು ಹಣ ಮೀಸಲಿಡಬೇಕು ಎನ್ನುವ ಕಾನೂನನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಪ್ರಗತಿಪರ ಕಾನೂನನ್ನು ಇಡಿ ದೇಶದಲ್ಲಿ ಬಿಜೆಪಿಯ ಯಾವ ಸರ್ಕಾರವೂ ಜಾರಿ ಮಾಡಿಲ್ಲ. ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ. ಇದನ್ನೆಲ್ಲಾ ಜನ ಸಮುದಾಯ ತಿಳಿದುಕೊಳ್ಳಬೇಕು’ ಎಂದರು,
ಈ ವೇಳೆ ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಮತ್ತು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ ಇದ್ದರು.