ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಮೈಸೂರು ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಮೆರವಣಿಗೆ ಹೊರಟು ನಜರಬಾದ್ ಮಾರ್ಗವಾಗಿ ಸಿದ್ದಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು.
ಈ ಸಂದರ್ಭದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಕ್ಷೇತ್ರ ಚುನಾವಣಾ ಉಸ್ತುವಾರಿ ಡಾ ಸಿ ಎನ್ ಅಶ್ವಥ ನಾರಾಯಣ, ಶಾಸಕ ಟಿ ಎಸ್ ಶ್ರೀವತ್ಸ, ಜೆಡಿಎಸ್ ಶಾಸಕ ಜಿ ಡಿ ಹರೀಶ್ ಗೌಡ, ಮಾಜಿ ಶಾಸಕ ಕೆ ಜಿ ಬೋಪಯ್ಯ ಸಾಥ್ ನೀಡಿದರು.
ಮೈಸೂರಿನಲ್ಲಿಂದು ಬೃಹತ್ ರೋಡ್ ಶೋ ನಡೆಸಲಾಯಿತು. ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲ್ಲಿಸಿ ಮತ್ತೊಮ್ಮೆ ಗೆಲ್ಲಿಸಿ ಎಂದು ನಾಯಕರು ಮತದಾರರಲ್ಲಿ ಮನವಿ ಮಾಡಿಕೊಂಡರು.