ಶಿರಾ: ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸುವ ರಾಜ್ಯ ಸರ್ಕಾರದ ಪ್ರಸ್ತಾವವನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ತಾಲೂಕು ಸಮಿತಿಯ ನೇತೃತ್ವದಲ್ಲಿ ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗೆ ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಕಾರ್ಯಕರ್ತೆಯರು ನಂತರ ಮನವಿ ಸಲ್ಲಿಸಿದರು.
ಆರು ತಿಂಗಳಿನಿಂದ 6 ವರ್ಷದೊಳಗಿನ ಮಕ್ಕಳ ಆರೋಗ್ಯ, ಲಾಲನೆ, ಪಾಲನೆ, ಪೋಷಣೆ, ಕ್ರೀಡಾ ಕಲಿಕೆ ಚಟುವಟಿಕೆಯನ್ನು ಅಂಗನವಾಡಿ ಕೇಂದ್ರಗಳ ಮೂಲಕ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಯು ಕ್ಷೀಣಿಸಿ ಕಾರ್ಯಕರ್ತೆಯರು ಬೀದಿಗೆ ಬೀಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಫೆಡರೇಷನ್ ಕಾರ್ಯದರ್ಶಿ ಮೀನಾಕ್ಷಿ ಆತಂಕ ವ್ಯಕ್ತಪಡಿಸಿದರು.
ಮಕ್ಕಳಿಗೆ ಕೊಡಬೇಕಾದ ಸಮವಸ್ತ್ರ, ಪಠ್ಯಪುಸ್ತಕ ನಮಗೆ ನೀಡಿದರೆ ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಯಾವುದೆ ಕಾರಣಕ್ಕೂ ಎಲ್ಕೆಜಿ, ಯುಕೆಜಿಯನ್ನು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಬಿಟ್ಟುಕೊಡಬಾರದು.
ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಉಳಿಯಬೇಕಾದರೆ ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 15 ಸಾವಿರ ರೂ.ಗೆ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಕನಿಷ್ಠ ವೇತನವಾಗಿ 18 ಸಾವಿರ ರೂ.ಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಹಾಗೂ ಶಿರಾ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ತಾಲೂಕಿನ ಪದಾಧಿಕಾರಿಗಳು ಎ ಐ ಟಿ ಯು ಸಿ ಸಂಘಟನೆಯ ಅಧ್ಯಕ್ಷರು ಕಲಾವತಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಖಜಾಂಚಿ ಲಕ್ಕಮ್ಮ ,ವನಾಜಾಕ್ಷಿ, ಲೀಲಾವತಿ ಈರಮ್ಮ,ಮತ್ತಿತರ ಹಾಜರಿದ್ದರು.