ಉಡುಪಿ: ಕಳ್ಳತನ ಮಾಡುತ್ತಿರುವಾಗಲೇ ಕಳ್ಳನೋರ್ವ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ಕೇರಳದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಎಂದು ಗುರುತಿಸಲಾಗಿದೆ. ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಹೊಸಾಡು ಶಾಖಾ ಕಚೇರಿಗೆ ರಾತ್ರಿ 1: 45ರ ಸುಮಾರಿಗೆ ಕಿಟಕಿ ಮುರಿದು ಒಳ ನುಗ್ಗಿದ್ದ ಕಳ್ಳ, ಸಿಬ್ಬಂದಿ ಕುಳಿತುಕೊಳ್ಳುವ ಮೇಜಿನ ಡ್ರಾವರ್ ಇನ್ನಿತರ ಕಡೆಗಳಲ್ಲಿ ತಡಕಾಡಿದ್ದಾನೆ.

ಕಳ್ಳ ಒಳ ನುಗ್ಗಿದ ಕೂಡಲೇ ಎಚ್ಚೆತ್ತುಕೊಂಡ ಸೈನ್ ಇನ್‌ ಸೆಕ್ಯೂರಿಟಿಯ ಲೈವ್ ಮಾನಿಟರಿಂಗ್ ಸಿಬ್ಬಂದಿ ಬೀಟ್ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಗಂಗೊಳ್ಳಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಬಸವರಾಜ್ ಹಾಗೂ ಸಿಬ್ಬಂದಿ 10 ನಿಮಿಷದೊಳಗೆ ಸ್ಥಳಕ್ಕಾಗಮಿಸಿ ಕಳ್ಳನನ್ನು ಸೆರೆ ಹಿಡಿದಿದ್ದಾರೆ.

ಬಂಧಿತ ಆರೋಪಿ ಪ್ರಕಾಶ್ ಬಾಬು ಕೇರಳ ರಾಜ್ಯದಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆಯನ್ನು ಅನುಭವಿಸಿದ್ದ ಎಂಬುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸರು ಇನ್ನಷ್ಟು ತನಿಖೆ ನಡೆಸುತ್ತಿದ್ದು, ಈತನ ಕುಕೃತ್ಯದ ಬಗ್ಗೆ ಇನ್ನಷ್ಟು ವಿವರಗಳನ್ನು ಕಲೆಹಾಕುತ್ತಿದ್ದಾರೆ.