ಉಡುಪಿ: ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಕರೆ ಹಾಗೂ ಸಂದೇಶಗಳು ಬರುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯಾಯಾಲಯದ ಪರಿಸರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಇಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಪ್ರವೃತ್ತರಾಗಿದ್ದಾರೆ. ಉಡುಪಿ ನ್ಯಾಯಾಲಯದ ಆವರಣಕ್ಕೆ ಆಗಮಿಸಿದ ವಿಧ್ವಂಸಕ ಕೃತ್ಯ ತಡೆ ತಂಡ ಇಡೀ ಪರಿಸರವನ್ನು ಸಂಪೂರ್ಣವಾಗಿ ಜಾಲಾಡಿದೆ. ನ್ಯಾಯಾಲಯದ ಕೊಠಡಿಗಳು, ಕಾರ್ಯಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ.

ಕಾರ್ಯಾಚರಣೆಯಲ್ಲಿ ಶ್ವಾನದಳ ಪ್ರಮುಖ ಪಾತ್ರ ವಹಿಸಿದ್ದು, ಕೋರ್ಟ್ ಆವರಣದ ಮೂಲೆ ಮೂಲೆಗಳನ್ನು ತಪಾಸಣೆಗೆ ಒಳಪಡಿಸಿದೆ. ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆಯು ಇ-ಮೇಲ್ ಸಂದೇಶದ ಮೂಲಕ ಬಂದಿದ್ದು, ಈ ಹುಸಿ ಬಾಂಬ್ ಇ-ಮೇಲ್ ಸಂದೇಶದ ಮೂಲವನ್ನು ಪತ್ತೆಹಚ್ಚಲು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಗಳು ತೀವ್ರ ತನಿಖೆ ಕೈಗೊಂಡಿದ್ದಾರೆ.

View this post on Instagram

A post shared by News Karnataka (@newskarnataka)