ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿ ವೈಜ್ಞಾನಿಕವಾಗಿ ಸಿದ್ಧಪಡಿಸಿದ ವರದಿ. ಅದನ್ನು ಅವೈಜ್ಞಾನಿಕ ಎಂದು ಕರೆಯುವಂತಿಲ್ಲ. ಇದು ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ತಯಾರಿಸಿದ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ. ಮಾಡಿರುವ ಸಮೀಕ್ಷೆಗಳಲ್ಲಿ ಜಾತಿಯೂ ಒಂದು ಅಂಶ ಅಷ್ಟೇ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ವರದಿಯ ಕುರಿತಂತೆ ಎ.17ರಂದು ಕ್ಯಾಬಿನೆಟ್‌ನಲ್ಲಿ ಚರ್ಚೆಯಾದ ಬಳಿಕ ಹೇಳಿಕೆ ನೀಡೋಣ ಎಂದು ನಿರ್ಧರಿಸಿದ್ದೆ. ಆದರೆ ಪ್ರಸ್ತುತ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ರಾಜ್ಯದ ಜನರಲ್ಲಿ ಹಾಗೂ ಕೆಲವು ವರ್ಗದಲ್ಲಿ ಗೊಂದಲ ಉಂಟಾಗಿರುವುದರಿಂದ ಸ್ಪಷ್ಟನೆ ನೀಡಬೇಕಾಗಿದೆ ಎಂದರು.

ಕೆಲವರಿಗೆ ತಮ್ಮ ಜಾತಿ ಬಿಟ್ಟು ಹೋಗಿದೆ ಎಂಬ ಅಭಿಪ್ರಾಯವಿದೆ. ರಾಜ್ಯದಲ್ಲಿ ಎಷ್ಟು ಜಾತಿಗಳಿವೆಯೋ ಎಲ್ಲವನ್ನು ಈ ವರದಿಯಲ್ಲಿ ಒಳಗೊಳಿಸಲಾಗಿದೆ. ಈ ಸಂಖ್ಯೆ ಎಷ್ಟು ಎಂದು ಈಗ ನಾನು ಹೇಳಲು ಸಾಧ್ಯವಿಲ್ಲ. ನಾವು ಜಾತಿ ಹೇಳುವುದಿಲ್ಲ ಎಂದು ಕೆಲವರು ಹೇಳಿದ್ದಾರೆ. ಕೆಲವರು ತಮ್ಮ ಜಾತಿಯ ಬಗ್ಗೆ ಮಾಹಿತಿ ಇಲ್ಲದವರು ಸಹ ಇದ್ದಾರೆ. ಇಂತಹ ಸುಮಾರು ಅಂತಹ ಐನೂರು ಜಾತಿಗಳು ಸಿಕ್ಕಿವೆ. ಹೀಗಾಗಿ ವರದಿಯಲ್ಲಿ ಜಾತಿಯ ಸಮೀಕ್ಷೆ ಆಗಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಹೆಗ್ಡೆ ಸ್ಪಷ್ಟ ಪಡಿಸಿದರು.