ಉಡುಪಿ: ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದರು‌. ವಕ್ಫ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ ನೋಟೀಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ರೈತರ ಒಂದು ಇಂಚೂ ಜಾಗ ಬಿಟ್ಟು ಕೊಡುವುದಿಲ್ಲ ಅಂತ ಹೇಳಿದ್ದಾರೆ.

ನಾವು ಪಕ್ಷಾತೀತ, ಜಾತ್ಯತೀತವಾಗಿ ಸರ್ಕಾರ ನಡೆಸುತ್ತೇವೆ. ಇಂಥ ವಿಚಾರಗಳಿಗೆ ಕಿವಿ ಕೊಡಬೇಡಿ. ರೈತರಿಗೆ ನೀಡಿರುವ ನೋಟೀಸ್ ಅನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು ಎಂದರು.

ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ಸಿಎಂ ಪತ್ರ: ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. ಜಾತಿ ಗಣತಿ ಬಗ್ಗೆ ಆದಷ್ಟು ಬೇಗ ಮುಖ್ಯಮಂತ್ರಿಗಳು ಮಾತನಾಡುತ್ತಾರೆ ಎಂದು ಸಚಿವರು ಹೇಳಿದರು.